ಪ್ರೇಮಶೇಖರ
ತುಂಟ ಕವನ: "ಕನ್ನಡತೀ...!"
ಕರಾವಳಿಯ ಕನ್ಯೆಯರು Read more about ತುಂಟ ಕವನ: "ಕನ್ನಡತೀ...!"
ದೆಹಲಿ: ರಾಜಧಾನಿಗೆ ಇಂದು ನೂರು ವರ್ಷ
"ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ ಕೊಲೆಯಾದ ದಿನದಿಂದ ಮೂರು ದಿನಗಳವರೆಗೆ... ದೆಹಲಿಯಲ್ಲಿ ನಾಗರೀಕ ಸರಕಾರವೇ ಇರಲಿಲ್ಲ. ಎಲ್ಲೆಲ್ಲೂ ಕೊಲೆ ಸುಲಿಗೆ ಬೆಂಕಿ... ನಾಲ್ಕೇ ದಿನಗಳಲ್ಲಿ ದೆಹಲಿ ಮತ್ತೆ ಕಣ್ಣು ತೆರೆದು ನನ್ನತ್ತ ಮುಗುಳ್ನಗತೊಡಗಿತ್ತು. ಆ ಮುಗುಳ್ನಗೆಗೂ, ಮೂವತ್ತೇಳು ವರ್ಷಗಳ ಹಿಂದೆ ಎಲ್ಲವನ್ನೂ ಎರಡು ಹೆಣ್ಣುಮಕ್ಕಳನ್ನೂ ಸಹಾ ಕಳೆದುಕೊಂಡು ಜೀವ ಮಾತ್ರ ಉಳಿಸಿಕೊಂಡು ಲಾಹೋರಿನಿಂದ ಓಡಿ ಅಮೃತಸರ ಸೇರಿದಾಗ ಮಾಜೀ ನನ್ನೆಡೆ ಬೀರಿದ ಮುಗುಳ್ನಗೆಗೂ ಅದೆಂತಹ ಸಾಮ್ಯತೆ ಇತ್ತು ಎಂದು ನನಗೆ ಈಗಲೂ ಅಚ್ಚರಿಯಾಗುತ್ತದೆ. ನನ್ನ ತಾಯಿಯಂತೇ ದೆಹಲಿಯೂ ಸಹಾ ಎಂದು ನನಗೆ ಎಷ್ಟೋ ಸಲ ಅನಿಸುತ್ತದೆ. ಅದೆಷ್ಟೇ ಹಾನಿಯಾಗಲೀ, ಇದ್ದುದೆಲ್ಲವೂ ಲೂಟಿಯಾಗಲಿ, ಜೀವವೊಂದು ಉಳಿದರೆ ಸಾಕು, ದೆಹಲಿ ಹಾಗೂ ಮಾಜೀ ಮತ್ತೆ ಮುಗುಳ್ನಗತೊಡಗುತ್ತಾರೆ. ಆರು ಶತಮಾನಗಳ ಹಿಂದೆ ಆ ಕುಂಟ ಕಿರಾತಕ ತೈಮೂರ್ ಇದೇ ದೆಹಲಿಯನ್ನು ಲೂಟಿಮಾಡಿ ಬೆಂಕಿ ಹಚ್ಚಿದ್ದ. ಅವನು ಅತ್ತ ಹೋದದ್ದೇ ದೆಹಲಿ ಕಣ್ಣು ತೆರೆದು ಮೇಲೆದ್ದಿತ್ತು. ಮತ್ತೆ... ಮುನ್ನೂರು ವರ್ಷಗಳೂ ಆಗಿಲ್ಲ, ಆ ನಾದಿರ್ ಷಾ ಇಡೀ ಊರನ್ನು ಸ್ಮಶಾನವಾಗಿಸಿ ಕೊಹಿನೂರನ್ನೂ ಮಯೂರ ಸಿಂಹಾಸನವನ್ನೂ ಹೊತ್ತೊಯ್ದ. ಮಾಸಿದ ಸೀರೆಯ ಕೆದರಿದ ತಲೆಯ ವಾಸನೆ ಬಾಯಿಯ ಹುಚ್ಚಿಯಿಂದ ದೂರ ಓಡುವಂತೆ ಆ ಬ್ರಿಟಿಷರು ದೆಹಲಿಯನ್ನು ಕಡೆಗಣಿಸಿ ಬಂಗಾಳಿ ಯುವಚೆಲುವೆ ಕಲಕತ್ತೆಯ ಮಡಿಲಲ್ಲಿ ಮಲಗಿದರು. ಆದರೆ ನಾಕು ದಿನದಲ್ಲಿ ಕಲಕತ್ತೆಯ ಮೈಯೆಲ್ಲಾ ಕಜ್ಜಿಯೆದ್ದು ಗಬ್ಬೆದ್ದುಹೋಯಿತು. ದೆಹಲಿ ದೆಹಲಿಯೇ, ಕಲಕತ್ತೆ ಕಲಕತ್ತೆಯೇ. ನಿಧಾನವಾಗಿಯಾದರೂ ಚೇತರಿಸಿಕೊಂಡು ಮೇಲೆದ್ದು "ಬನ್ನೀ ಮಕ್ಕಳೇ" ಎಂದು ಮುಗುಳ್ನಕ್ಕ ದೆಹಲಿಯ ಕರೆಯನ್ನು ಮನ್ನಿಸದಿರುವುದು ಪರಂಗಿ ದೊರೆಗಳಿಗೂ ಸಾಧ್ಯವಾಗಲಿಲ್ಲ. ದೆಹಲಿ ಮತ್ತೆ ರಾಜಧಾನಿ. ಒಬ್ಬರಿಗೆ ಒಬ್ಬಳೇ ತಾಯಿ. ಒಂದು ರಾಷ್ಟ್ರಕ್ಕೆ ಒಂದೇ ರಾಜಧಾನಿ. ಅದು ದೆಹಲಿ, ನನ್ನ ದೆಹಲಿ, ತನ್ನೊಳಗೆ ಅದೆಷ್ಟೋ ಯಾತನೆಗಳನ್ನು ಅಡಗಿಸಿಕೊಂಡು ಮುಗುಳುನಗುವ ನನ್ನ ಮಹಾನ್ ಮಾತೆ..."

