nannakanasu-chiguru
ನನಗೆ ಬರೆಯೋದಿಕ್ಕೆ ಸ್ಪೂರ್ತಿ ತಂದು ಕೊಟ್ಟ ನನ್ನ ಅತ್ಮೀಯ ಗೆಳೆಯರಾದ ಅಮರ ಮತ್ತೆ ವಿಜಯ್ ಗೆ ನನ್ನ ಹೃತ್ಪೋರ್ವಕ ವಂದನೆಗಳು. ನಿಮ್ಮೆಲ್ಲರ ಹಾರೈಕೆ ನನ್ನೊಂದಿಗಿರಲಿ... ನಮಸ್ಕಾರ, ನನ್ನ ಎಲ್ಲಾ ಸ್ನೇಹಿತರಿಗೂ.... ನಾನಿಲ್ಲಿ ಬರೆದಿರುವುದೆಲ್ಲಾ ನನ್ನ ಮನಸ್ಸಿನ ಭಾವನೆಗಳು, ಮನದ ಮಾತುಗಳು. ಮೊದ ಮೊದಲು ಕವನದ ಕಡೆಗೆ ಇದ್ದ ಒಲವು ಇತ್ತಿಚೆಗೆ ಕಡಿಮೆಯಾಗಿದೆ. ನನ್ನದೇ ಒಂದು ಪುಟ್ಟ ಬ್ಲಾಗ್ ಇದೆ. ಮನಸ್ಸಿಗೆ ತೋಚಿದ್ದನ್ನ ನಾನಿಲ್ಲಿ ವ್ಯಕ್ತಪಡಿಸ್ತಾ ಇದ್ದೇನೆ. ಇಲ್ಲಿ ಬರೆದಿರೊದ್ರಲ್ಲಿ ಬಹಳಷ್ಟು ತಪ್ಪುಗಳಿವೆ. ನನ್ನ ಓದುಗರು ಅದನ್ನ ನನಗೆ ತಿದ್ದಿ ಹೇಳಬೇಕು. ಯಾರೂಕೂಡಾ ಹುಟ್ಟಿದ ತಕ್ಷಣ ಎಲ್ಲಾದನ್ನೂ ಕಲಿಯೋದಿಲ್ಲ. ನಡಿಯೋಕಾಲು ಎಡವೋದು ಸಹಜತಾನೆ ??? ನಿಮ್ಮ ಪ್ರೀತಿಯ ತಿದ್ದುಪಡಿಗೆ ನಾನು ಚಿರರುಣಿ...
ಮಳೆಯೇ ನಿನ್ನ ಮಾಯವಿದೇನೇ...
ನಮಸ್ಕಾರ,
ಮೊನ್ನೆ ದಿನಪೂರ್ತಿ ಕಂಪ್ಯೂಟರಿನ ಮುಂದೆ ಕಣ್ಣುರಿಸಿಕೊಂಡು ಕೆಲಸ ಮಾಡಿ ಬಹಳ ದಣಿವಾಗಿತ್ತು. ಆಯಾಸ ಪರಿಹರಿಸಿಕೊಳ್ಳಲು ತಂಪಾಗಿ ಏನಾದರೂ ಬೇಕೆನಿಸಿತು. ಆಫೀಸಿನ ಕಿಟಕಿಯಿಂದ ಹೊರಕ್ಕೆ ಇಣುಕಿನೋಡಿದಾಗ ದಟ್ಟವಾದ ಮೋಡಗಳು ಭುವಿಯನ್ನು ತಬ್ಬಿ ಹಿಡಿದಿದ್ದವು... ಇನ್ನೇನು ಅವುಗಳ ಮಿಲನಕಾಲ ಹತ್ತಿರವಾದಂತಿತ್ತು. ಹೇಗಿದ್ದರೂ ದಣಿವಾಗಿದ್ದರಿಂದ ಮಳೆಯಲ್ಲಿ ನೆನೆಯುವ ಆಸೆ, ಉತ್ಸಾಹ ಮನದಲ್ಲಿ ಪುಟಿಯುತ್ತಿತ್ತು. ಮನದ ಆಸೆಯನ್ನು ಮನದಲ್ಲೇ ಅಡಗಿಸಿಡುವುದು ಬೇಡವೆನಿಸಿ ನನ್ನ ಸಂಚಾರಿ ದೂರವಾಣಿಗಳನ್ನ ಮತ್ತೆ ಮುಖ್ಯವಾಗಿ ಬೇಕಾಗುವ Documentsಗಳನ್ನ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಅದಕ್ಕೆ ನೀರು ಬೀಳದಂತೆ ಅದನ್ನು ನನ್ನ ಭದ್ರಪಡಿಸಿಕೊಂಡೆ.
ಅಷ್ಟರಲ್ಲಿ ಊರಿನಿಂದ ಅಮ್ಮ ಕರೆ ಮಾಡತೊಡಗಿದರು. ಅವರೊಡನೆ ಮಾತನಾಡುವಾಗ ಅಲ್ಲಿ ಸ್ವಲ್ಪವೂ ಮಳೆಯೇ ಬಾರದ ಕಾರಣ ಅಲ್ಲಿಯ ಬೇಸಾಯಕ್ಕೆ ತೊಂದರೆಯಾಗುತ್ತಿದೆ ಎಂದು ಅಮ್ಮ ಹೇಳಿದರು. ಹಾಗೇ ಕರುಳಬಳ್ಳಿಯ ಕಡೆಗಿನ ಪ್ರೀತಿಯನ್ನು ತೋರುತ್ತಾ, "ನೆನೀಬೇಡಾ ಕಣೋ, ಮಳೆ ಬಂದು ನಿಂತ್ಮೇಲೆ ಹೊರಡು, ಅಕಸ್ಮಾತ್ ನನ್ಕೊಂಡು ಹೋದ್ರೆ ಮನೆಗೆ ಹೋದ ತಕ್ಷಣಾ ತಲೆನ ಟವಲ್ ಇಂದ ಒರಸ್ಕೊಂಡು ಒಣಗಿಸ್ಕೋ" !!! ಅಮ್ಮನ ಪ್ರೀತಿ ತುಂಬಿದ ಮಾತುಗಳು ಮನಸ್ಸಿಗೆ ಏನೋ ಖುಷಿತುಂಬಿದವು. ಆದರೂ "ಅಮ್ಮಾ, ತಲೆಮೇಲೆ ಹೆಲ್ಮೆಟ್ ಇದ್ದೇ ಇರತ್ತೆ, ಮತ್ತೆ ಮೈ ಗೆ ಜರ್ಕಿನ್ ಹಾಕಿದೀನಿ, ಲೇಟಾಗಿ ಮನೆಗೆ ಹೋದ್ರೆ ನನ್ಗೊಸ್ಕರ ಅಡುಗೆ ಮಾಡ್ಕೊಂಡು ಯಾರು ಕಾಯ್ತಾ ಇರ್ತಾರೆ ಹೇಳಿ ??? ನಾನು ಜೋಪಾನವಾಗಿ ಮನೆಗೆ ಹೋಗಿ ನಿಮಗೆ ಫೋನ್ ಮಾಡ್ತೀನಿ, ಆಯ್ತಾ ?? ಅಂತೆ ಸಮಾಧಾನಿಸಿ ಅಲ್ಲಿಂದ ಮನೆಯೆಡೆಗೆ ಪಯಣ ಬೆಳೆಸಲು ಅಣಿಯಾದೆ.
ನಾನು ಮೊದಲೇ ಮಳೆಯಲ್ಲಿ ನೆನೆಯಬೇಕೆಂದು ನಿರ್ಧಾರ ಮಾಡಿದ್ದರಿಂದ ಸರಿಯಾಗಿ ೬.೦೦ಘಂಟೆಗೆ ನನ್ನ ಕಾರ್ಯಾಲಯವನ್ನ ಬಿಟ್ಟು ನನ್ನ ಲೋಹಕುದುರೆ (ಬಜಾಜ್)ಯನ್ನೇರಿ ಮನೆಯತ್ತ ಪಯಣ ಬೆಳೆಸಿದೆ. ಹೊರಟು ೧ ನಿಮಿಷಕೂಡಾ ಆಗಿರಲಿಲ್ಲ, ಧೋ ಎಂದು ಮಳೆ ಸುರಿಯಲಾರಂಭಿಸಿತು. ಆಕಾಶವೇ ಕಳಚಿ ಮೇಲೆ ಬೀಳುತ್ತಿದೆಯೇನೋ ಅನ್ನುವಂತಾ ದಪ್ಪ ದಪ್ಪ ಹನಿಗಳು !!! ನಾನು ಮಳೆಯಲ್ಲಿ ಸಂಪೂರ್ಣವಾಗಿ ತೊಯ್ದುಹೋದೆ. ಮನಸ್ಸಿನಲ್ಲಿ ಏನೋ ಸಂತಸ... ಉಲ್ಲಾಸ... ೩ ದಿನಗಳ ಹಿಂದೆಯಷ್ಟೇ ಹಲ್ಲು ನೋವಿನಿಂದ ಡಾಕ್ಟರ್ ಹತ್ತಿರ ಹೋಗಿ ಬಂದು ಅದರ ನೋವಿನಿಂದ ಬಳಲುತ್ತಿದ್ದೆ, ಒಮ್ಮೆ ಮಳೆ ಬಂದದ್ದೇ ತಡ !!! ಯಾವ ನೋವೂ ನನ್ನ ಪರಿವೆಗೆ ಇರಲಿಲ್ಲ, ನೀರಿನಲ್ಲಿ ಬಿಟ್ಟ ಮೀನಿನಂತೆ ಮಳೆಯಲ್ಲಿ ಸಾಗಿದೆ. ನನ್ನ ಬೈಕನ್ನ ರಸ್ತೆ ಬದಿಯಲ್ಲಿ ನಿಲ್ಲಿಸಿ ಪುಟ್ಟ ಮಗುವಿನಂತೆ ಮಳೆಯಲ್ಲಿ ನನ್ನ ಕೈಗಳನ್ನ ಚಾಚಿ ನಿಂತೆ...
ಆಗಷ್ಟೆ ಸುರಿದ ಮಳೆ ನನ್ನ ಮನದಲ್ಲಿದ್ದ ನೋವುಗಳನ್ನ ಅಲ್ಪಕಾಲವಾದರೂ ಕೊಚ್ಚಿಕೊಂಡು ಹೋಗಿತ್ತು. ನಾನು ಒಂಟಿಯಾಗಿ ಮನೆಗೆ ಹೋಗಲು ಬಿಡದ ಮಳೆ ಮನೆಯ ತನಕ ನನ್ನ ಜೊತೆಗೂಡಿ ಬಂದಿತ್ತು, ಆದರೆ ಮನೆಯ ಬಳಿ ನನ್ನ ಬಿಟ್ಟು ತಾನೆಲ್ಲೋ ಮಾಯವಾಗಿತ್ತು.
ಹೈದರಾಬಾದಿನಲ್ಲಿ ನಾನಿದ್ದ ದಿನಗಳಂದು ಬಂದ ಮಳೆಯ ಬಗ್ಗೆ ಬರೆದ ಕೆಲವೇ ಸಾಲುಗಳನ್ನ ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ...
ಭೋರೆಂದು ಸುರಿದಿದೆ ಗಗನದಿಂದ
ಭುವಿಯ ದಾಹವ ತಣಿಸುವ ತವಕದಿಂದ...
ದಟ್ಟ ಮೋಡದಿಂದ ಸುರಿದುಬಂದಿಹೆ ನೀನು
ನಿನ್ನ ರಭಸವ ವರ್ಣಿಸುವುದೇನು...
ಜೊತೆಗೋಡಿ ಬಂದಿದೆ ವೇಗವಾಗಿ ಗಾಳಿ
ತಲೆದೊಗಿ ನಿಂತಿಹವು ಮರಗಿಡಗಳು ಕೇಳಿ...
ನೀಬಂದಿಹೆಯೇನು ಕೆರೆ, ನದಿಯ ಒಡಲು ತುಂಬಲು
ಹೇಳುವುದೇನು ಭುವಿಯು ಸಂತಸದಿ ನಗುತಿರಲು...
ಸುರಿದು ಬಾ ಮಳೆಯೆ ಸುರಿದು ಬಾ
ಬರಡು ನೆಲವನು ಹಸನುಗೊಳಿಸು ಬಾ...
ಕೊಂಚ ಕರುಣೆಯ ತೋರು
ನಿನ ರಭಸದಲೂ ಮಂದಹಾಸವ ಬೀರು...
ನೀ ನಮಗೆ ಜೀವಜಲ
ಕಾಯುನೀ ಸಕಲ ಜೀವಸಂಕುಲ...
ಮಳೆಯೇ ನಿನ್ನ ಮಾಯವಿದೇನೇ...
========================
ಚಿತ್ರ ಕೃಪೆ: ಗೂಗಲ್.ಕಾಂ
ವಂದನೆಗಳೊಂದಿಗೆ,
ಪ್ರಶಾಂತ ಜಿ ಉರಾಳ

- pachhu2002 ರವರ ಬ್ಲಾಗ್
- Login or register to post comments
- 157 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ







RSS: