ಒಂಟಿತನವೋ? ಏಕಾಂತವೋ?

ಒಂಟಿತನವೋ? ಏಕಾಂತವೋ?

   ಒಂಟಿತನ - ಜೀವಿಗಳು ಸಾಮಾನ್ಯವಾಗಿ ಅನುಭವಿಸುವ ಅನಿವಾರ್ಯ ಸ್ಥಿತಿ. ತಾನೊಬ್ಬನೇ, ತನ್ನೊಡನೆ ಇತರರಿಲ್ಲ ಎಂಬ ಭಾವವನ್ನು ಒಂಟಿತನವೆನ್ನಬಹುದು. ಇಂತಹ ಸ್ಥಿತಿಯಲ್ಲಿ ಆಹಾರ ರುಚಿಸುವುದಿಲ್ಲ, ನೀರು ಹಿತವಾಗುವುದಿಲ್ಲ. ಆಹಾರ ಸೇವಿಸಿದರೂ ಅನಿವಾರ್ಯ ಕ್ರಿಯೆಯಂತೆ ಜರುಗುವುದು. ಯಾವುದರಲ್ಲೂ ಆಸಕ್ತಿ ಬರದು. ಆಲಸ್ಯತನ ಮೈವೆತ್ತುವುದು. ಸಮಯ ನಿಧಾನವಾಗಿ ಚಲಿಸುವುದು. ತಾತ್ಕಾಲಿಕ ಒಂಟಿತನ ಸಹ್ಯ; ದೀರ್ಘಕಾಲದ ಒಂಟಿತನ ಖಿನ್ನತೆಗೆ ದಾರಿ. ಒಂಟಿತನದಿಂದ ಬರುವ ಹತಾಶೆ, ಸಿಟ್ಟು, ಅಸಹಾಯಕತೆಗಳು ಹುದುಗಿಸಿಟ್ಟಿದ್ದ ಆಕ್ರೋಶ ಒಮ್ಮೆಲೇ ಹೊರನುಗ್ಗಿ ಅಸಹ್ಯಕರ ವಾತಾವರಣ ಸೃಷ್ಟಿಸುವುದರ ಜೊತೆಗೆ, ಸಂಬಂಧಗಳನ್ನು ಶಾಶ್ವತವಾಗಿ ಮುರಿಯುವಂತೆ ಮಾಡಬಹುದು. ಪರಿಸ್ಥಿತಿ ಬಿಗಡಾಯಿಸಿ ಸರಿಪಡಿಸಲಾಗದ ಹಾನಿ ಉಂಟು ಮಾಡಬಹುದು. ದುರ್ಬಲ ಮನಸ್ಕರು ಆತ್ಮಹತ್ಯೆ ಸಹ ಮಾಡಿಕೊಳ್ಳಬಹುದು. ಒಂಟಿತನ ಸ್ನೇಹಕ್ಕಾಗಿ ಹಪಹಪಿಸುವ ಹಂಬಲಿಕೆಯ ಸೂಚಿ.

     ಅವನೊಬ್ಬ ಆದರ್ಶವಾದಿ ಯುವಕ. ಕನಸುಗಳನ್ನು ಕಟ್ಟಿಕೊಂಡವನು, ನ್ಯಾಯ, ನೀತಿ, ಧರ್ಮ ಎಂದು ಹೋರಾಡುವ ಮನೋಭಾವದ ಅವನಿಗೆ ಕುಟುಂಬದ ಸದಸ್ಯರ ಸಹಕಾರ, ಬೆಂಬಲ ಸಿಗುವುದಿಲ್ಲ. ನಾಲ್ಕು ಜನರಂತೆ ಅವನಿಲ್ಲ, ಉದ್ಧಾರವಾಗುವುದಿಲ್ಲವೆಂಬ ಆತಂಕ ಪೋಷಕರಿಗೆ. ಅನೇಕ ರೀತಿಯಲ್ಲಿ ತಿಳಿ ಹೇಳುತ್ತಾರೆ, ಬೈದು ಬುದ್ಧಿ ಹೇಳುತ್ತಾರೆ, ಅವರಿವರಿಂದ ಉಪದೇಶ ಮಾಡಿಸುತ್ತಾರೆ. ಆದರೆ ಆದರ್ಶದ ಬೆನ್ನು ಬಿದ್ದ ಯುವಕನಿಗೆ ಅವಾವುದೂ ರುಚಿಸುವುದಿಲ್ಲ. ಒಳ್ಳೆಯ ವಿಚಾರಕ್ಕೆ ಮನೆಯವರೇ ಬೆಂಬಲಿಸದಿದ್ದರೆ ಹೇಗೆ ಎಂಬುದು ಅವನ ವಾದ. ಕೊನೆಗೆ ಮನೆಯವರು ಸುಮ್ಮನಾದರೂ ಅವರ ಕಿರಿಕಿರಿ, ಗೊಣಗಾಟಗಳು ತಪ್ಪುವುದೇ ಇಲ್ಲ. ಕಠಿಣ ಆದರ್ಶದ ಹಾದಿ ಹಿಡಿದ ಅವನಿಗೆ ಮನೆಯ ಹೊರಗೂ ಪ್ರೋತ್ಸಾಹ ಸಿಗುವುದಿಲ್ಲ. ತಾನು ಮಾಡುತ್ತಿರುವುದು ಸರಿ ಎಂಬ ಅವನ ಅಂತರಂಗದ ಒಪ್ಪಿಗೆ ಮಾತ್ರ ಅವನ ಜೊತೆಗಾರನಾಗಿರುತ್ತದೆ. ಬೆನ್ನು ತಟ್ಟುವವರಿಲ್ಲದ ಅವನನ್ನು ಪ್ರಿಯರ ಹೀನೈಕೆ ಕುಗ್ಗಿಸುತ್ತದೆ, ಒಂಟಿತನದ ಅನುಭವ ಮಾಡಿಸುತ್ತದೆ. ಒಳ್ಳೆಯವನಾಗು, ನೀನು ಒಂಟಿಯಾಗುವೆ ಎಂಬುದಕ್ಕೆ ಉದಾಹರಣೆಯಿದು.

     ಹದಿಹರೆಯದ ಹುಚ್ಚು ಪ್ರೇಮಿಗಳ ಒಂಟಿತನ ಮತ್ತೊಂದು ತರಹ. ಪ್ರೇಮಿಯಿಲ್ಲದೆ ಬಾಳು ಶೂನ್ಯವೆಂದು ಭಾವಿಸಿ ಕೊರಗುವ, ಹುಚ್ಚಾಗುವ ದೇವದಾಸಗಳದ್ದು ಒಂದೆಡೆಯಾದರೆ, ತನಗೆ ದಕ್ಕದವರು ಬೇರೆಯವರಿಗೂ ಸಿಗಬಾರದೆಂದು ಆಸಿಡ್ ಎರಚುವ, ಕೊಲೆ ಮಾಡುವವರದು ಮತ್ತೊಂದೆಡೆ! ಆತ್ಮಹತ್ಯೆ ಮಾಡಿಕೊಳ್ಳುವವರದೂ ಒಂಟಿತನವನ್ನು ಎದುರಿಸಲಾಗದವರ ಮಗದೊಂದು ರೀತಿ. ಅವನ/ಅವಳ ನೆನಪಿನಲ್ಲಿ ಕೊನೆಯವರೆಗೂ ಮದುವೆಯಾಗದೇ ಉಳಿಯುವ ಪ್ರೇಮಿಗಳನ್ನೂ, ಮಾನಸಿಕ ಕಾಯಿಲೆಗಳಿಂದ ನರಳುವವರನ್ನೂ ಕಾಣಬಹುದು. ಕೇವಲ ಇವರಷ್ಟೇ ಅಲ್ಲ, ಅತಿಯಾಗಿ ಹಚ್ಚಿಕೊಂಡ ಸ್ನೇಹಿತರು, ಬಂಧುಗಳು, ಕುಟುಂಬದವರು ಯಾರೇ ಆಗಲಿ ದೂರವಾದಾಗ/ಕಾಲವಾದಾಗ ಸಹ ಒಂಟಿತನ ಕಾಡುತ್ತದೆ. ವೃದ್ಧಾಪ್ಯದಲ್ಲಿ ಮಕ್ಕಳು ಏನು ಮಾಡದಿದ್ದರೂ ಪರವಾಗಿಲ್ಲ, ಪ್ರೀತಿಯಿಂದ ಮಾತನಾಡಿಸಿದರೆ ಸಾಕು ಎಂದು ಹಂಬಲಿಸುವವರಿರುತ್ತಾರೆ.

     ಪ್ರೀತಿ, ವಿಶ್ವಾಸ, ಸ್ನೇಹದ ಕೊರತೆ ಒಂಟಿತನದ ಮೂಲ. ಒಂಟಿತನ ಕಾಡಬಾರದೆಂದರೆ ಪರಸ್ಪರ ಪ್ರೀತಿ, ವಿಶ್ವಾಸಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಆಗ ಅಂತರಂಗವಾದರೂ ಜೊತೆಗೆ ಇದ್ದು ಸಮಾಧಾನಿಸುತ್ತದೆ. ತಪ್ಪಿದ್ದು ತಿದ್ದಿಕೊಳ್ಳದಿದ್ದರೆ ಅಂತರಂಗವೂ ಜೊತೆಗಿರುವುದಿಲ್ಲ. ಕಳೆದುಕೊಳ್ಳುವವರು ಇನ್ನು ಯಾರೂ ಉಳಿದಿಲ್ಲದಾಗ, ಸ್ವಂತಿಕೆಗೆ ಬೆಲೆಯಿಲ್ಲವಾದಾಗ ಅದನ್ನು ಜೀವನದ ಸಾವು (ಜೀವದ ಸಾವಲ್ಲ) ಎನ್ನಬಹುದು. ಅಂತಹ ಸಾವು ಜೀವನಕ್ಕೆ ಬರಬಾರದೆಂದರೆ ಒಳಗಿನ ಮಾತುಗಳಿಗೆ ಕಿವಿಗೊಡಬೇಕು.

     ಮತ್ತೊಂದು ರೀತಿಯ ಒಂಟಿತನವಿದೆ. ಅದರಲ್ಲಿ ಹಿತವಿದೆ. ಅದೆಂದರೆ ವಿವಿಧ ರಂಗಗಳಲ್ಲಿ ಸುಪ್ರಸಿದ್ಧರಾದವರ, ಮುಖಂಡರ, ಹಿರಿಯ ಅಧಿಕಾರಿಗಳ ಒಂಟಿತನ. ಅವರುಗಳು  ಒಂಟಿತನವನ್ನು ಒಪ್ಪಿಕೊಳ್ಳಲೇಬೇಕು, ಅಪ್ಪಿಕೊಳ್ಳಲೇಬೇಕು. ಒಂಟಿಯಾಗಿರುವುದೆಂದರೆ ಇತರರಿಗಿಂತ ಭಿನ್ನವಾಗಿರುವುದು, ಇತರರಿಗಿಂತ ಭಿನ್ನವೆಂದರೆ ಒಂಟಿಯಾಗಿರುವುದು ಎಂದು ಅವರ ಮಟ್ಟಿಗೆ ಹೇಳಬಹುದು. ಅವರುಗಳನ್ನು ಸಮನಾಗಿ ಪರಿಗಣಿಸುವವರ ಸಂಖ್ಯೆ  ಬಹಳ ಕಡಿಮೆ. ಅವರ ಒಂಟಿತನದಲ್ಲೇ ಅವರ ಸೃಜನಾತ್ಮಕ ಶಕ್ತಿ ಹೊರಹೊಮ್ಮುತ್ತದೆ. ಇದರಲ್ಲೂ ಒಂದು ಅಪಾಯವಿದೆ. ಅದೆಂದರೆ ಸುಪ್ರಸಿದ್ಧರಾದವರು ಕಾರಣಾಂತರಗಳಿಂದ ಪ್ರಸಿದ್ಧಿ ಕಳೆದುಕೊಂಡರೆ, ಅಧಿಕಾರ ಚ್ಯುತಿಯಾದರೆ ಅವರ ಜೊತೆಗಿದ್ದು ಬಹುಪರಾಕ್ ಹೇಳುತ್ತಿದ್ದವರು ಇದ್ದಕ್ಕಿದ್ದಂತೆ ಕಣ್ಮರೆಯಾದರೆ ಅನುಭವವಾಗುವ ಒಂಟಿತನದ ನೋವು ವರ್ಣನಾತೀತ. ಕ್ಷಣಿಕ ವ್ಯಾಮೋಹದಿಂದ, ಹಣದ ದಾಹದಿಂದ ಅಧಿಕಾರ, ಸ್ಥಾನ, ಮಾನಗಳನ್ನು ಕಳೆದುಕೊಂಡ ಮಂತ್ರಿಗಳ/ಹಿರಿಯ ನಾಯಕರ ಜೊತೆಗೆ ಯಾರಿರುತ್ತಾರೆ?

     ಇನ್ನೊಂದು ಅಪಾಯಕಾರಿ ಒಂಟಿತನವಿದೆ! ಒಟ್ಟಿಗಿದ್ದರೂ ಕಾಡುವ ಒಂಟಿತನ! ಎಲ್ಲೆಲ್ಲೂ ನೀರು, ಕುಡಿಯಲು ತೊಟ್ಟೂ ನೀರಿಲ್ಲ ಎಂಬಂತಹ ಸ್ಥಿತಿಯದು. ಒಂದು ಉದಾಹರಣೆ ನೋಡೋಣ. ಎಲ್ಲರೂ ಒಟ್ಟಿಗೇ ಟಿವಿ ನೋಡುತ್ತಿರುತ್ತಾರೆ. ಪರಸ್ಪರ ಮಾತುಗಳು ಅನಿವಾರ್ಯವಾದರೆ ಮಾತ್ರ ಆಡುತ್ತಾರೆ. ಅವರವರ ಪಾಡು ಅವರಿಗೆ. ಪರಸ್ಪರರನ್ನು ಸಹಿಸಿಕೊಂಡು ಹೋಗುತ್ತಿರುತ್ತಾರೆ,  ಅಸಹನೀಯವಾದಾಗ ಕಿರುಚಾಡುತ್ತಾರೆ, ಜಗಳವಾಡುತ್ತಾರೆ, ಅನಿವಾರ್ಯವೆಂಬಂತೆ ಸುಮ್ಮನಾದರೂ ಎಲ್ಲರೂ ಅಲ್ಲಿ ಒಂಟಿಗಳೇ. ನೆಂಟರು, ಸ್ನೇಹಿತರು ಬಂದರೂ ಔಪಚಾರಿಕವಾದ ಮಾತುಗಳನ್ನಾಡಿ ಪುನಃ ಟಿವಿಯ ಕಡೆ ಗಮನ ಕೊಡುತ್ತಾರೆ. ಬಂದವರಿಗೆ ಏಕಾದರೂ ಬಂದೆವಪ್ಪಾ ಅನ್ನುವ ಸ್ಥಿತಿ. ಕಛೇರಿಗಳಲ್ಲೂ ಅಷ್ಟೇ. ಒಂಟಿತನವನ್ನು ಅನುಭವಿಸುವ ಅಧಿಕಾರಿಗಳು, ನೌಕರರನ್ನು ಕಾಣಬಹುದು. ಇಲ್ಲಿ ಗಮನಿಸುವ ಅಂಶವೆಂದರೆ ಸ್ವಂತಿಕೆಗೆ, ಅಹಂಗೆ ಬೀಳುವ ಪೆಟ್ಟು ಒಂಟಿತನವಾಗಿ ಕಾಡುವುದು! ಪರಸ್ಪರರ ಅಪನಂಬಿಕೆಯಿಂದ ಉಂಟಾಗುವ ಒಂಟಿತನ ನರಕಸದೃಶ. ಉದ್ದೇಶೂರ್ವಕವಾಗಿ ಅಹಂಗೆ ಪೆಟ್ಟು ಕೊಡುವ ಕುಟುಂಬದವರೇ, ಜೊತೆಗಾರರೇ, ಸಹೋದ್ಯೋಗಿಗಳೇ ಒಂಟಿತನದ ನೋವು ಕೊಡುವವರು!

     ಒಂಟಿತನದ ತಾಪ ಕಡಿಮೆ ಮಾಡಿಕೊಳ್ಳಲು ಓದುವುದು, ಬರೆಯುವುದು, ಸಂಗೀತ ಕೇಳುವುದು, ಇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಒಳ್ಳೆಯ ಅಭ್ಯಾಸಗಳಾದರೆ, ದುಶ್ಚಟಗಳಿಗೆ ದಾಸರಾಗುವುದು ಇನ್ನೊಂದು ರೀತಿಯ ಪಲಾಯನ. ಸಿಗರೇಟು ಸೇದುವುದು, ಕುಡಿಯುವುದು, ಜೂಜಾಡುವುದು, ವೇಶ್ಯಾಸಂಗ, ಇತ್ಯಾದಿಗಳು ಇದರಲ್ಲಿ ಸೇರುತ್ತವೆ. ಕ್ರಮೇಣ ದುಶ್ಚಟಗಳು ಅವರನ್ನೇ ಆಕ್ರಮಿಸಿ ಅವರನ್ನಲ್ಲದೆ ಅವರನ್ನು ನಂಬಿದವರಿಗೂ ನಾನಾ ರೀತಿಯ ತೊಂದರೆ ಕೊಡುತ್ತವೆ, ಹೆಚ್ಚಿದ ಒಂಟಿತನದಿಂದ ಬಳಲುವಂತೆ ಮಾಡುತ್ತವೆ. ಒಂಟಿತನ ಅನುಭವ ಕೊಡುತ್ತದೆ. ಸರಿಯಾಗಿ ಬಳಸಿಕೊಂಡಲ್ಲಿ ವರವಾಗುತ್ತದೆ. ಒಳ್ಳೆಯ ಸಾಹಿತ್ಯ, ಸಂಗೀತ, ಇತ್ಯಾದಿಗಳು ಕುಡಿಯೊಡೆಯುವುದು ಆಗಲೇ. ಪ್ರೀತಿಸುವವರ, ತನ್ನನ್ನು ಗುರುತಿಸುವವರ ಕೊರತೆ ನೀಗಿಸಿಕೊಳ್ಳಲು ಅವರೇ ಇತರರನ್ನು ಪ್ರೀತಿಸಲು, ಗೌರವಿಸಲು ಮುಂದಾದರೆ ಪ್ರತಿಪ್ರೀತಿ, ಪ್ರತಿಗೌರವ ಸಿಗಲಾರದೆ? ಬಂದದ್ದೂ ಒಂಟಿ, ಹೋಗುವುದೂ ಒಂಟಿ, ಆದರೆ ನಡುವಿನ ಜೀವನದಲ್ಲಿ ಪರಸ್ಪರರ ಅವಲಂಬನೆ, ಅಗತ್ಯತೆ ಬರುವುದರಿಂದ ಒಂಟಿತನ ಹೆಚ್ಚು ಕಾಡುತ್ತದೆ. ಪ್ರೀತಿ, ವಿಶ್ವಾಸಗಳು ಒಂಟಿಯಲ್ಲವೆಂದು ಭಾವಿಸುವಂತೆ ಮಾಡುತ್ತದೆ. ಆಳವಾಗಿ ಯೋಚಿಸಿದರೆ ಸಮುದಾಯ, ಸಂಘಟನೆ, ಜಾತಿ, ಧರ್ಮ, ಗುಂಪು, ಇತ್ಯಾದಿಗಳೂ ಸಹ ಒಂಟಿತನವನ್ನು ಹೋಗಲಾಡಿಸುವ ಸಲುವಾಗಿಯೇ ಹುಟ್ಟಿಕೊಂಡದ್ದು ಎಂದು ಅನ್ನಿಸದಿರದು. ದುಃಖ ಅನುಭವಿಸಲು ಒಬ್ಬರು ಇದ್ದರೂ ಆಗುತ್ತದೆ, ಆದರೆ ಸಂತೋಷ ಹಂಚಿಕೊಳ್ಳಲು ಇಬ್ಬರಾದರೂ ಇರಬೇಕು. ಆದ್ದರಿಂದ ಮನುಜ-ಮನುಜರ ನಡುವೆ ಗೋಡೆಗಳನ್ನು ಕಟ್ಟದೆ ಸೇತುವೆಗಳನ್ನು ಕಟ್ಟಿದರೆ ಒಂಟಿತನ ಕಡಿಮೆಯಾದೀತು. ಒಂಟಿಯಾಗಿ ಇರಬಯಸುವವರು ಯಶಸ್ವಿ ಮಾನವರಲ್ಲ. ಇತರ ಹೃದಯಗಳ ಮಿಡಿತ ಕೇಳದವರ ಹೃದಯ ಬಾಡುತ್ತದೆ, ಇತರರ ಮಾತುಗಳನ್ನು ಕೇಳದವನ ಮೆದುಳು ಕುಗ್ಗುತ್ತದೆ.

     ಒಂಟಿತನದಂತೆಯೇ ತೋರುವ, ಆದರೆ ಒಂಟಿತನವಲ್ಲದ ಸಂಗತಿಯೊಂದಿದೆ. ಅದೇ ಏಕಾಂತ! ಒಂಟಿತನ ತನ್ನತನದ ಬಡತನವಾದರೆ, ಏಕಾಂತ ತನ್ನತನದ ವೈಭವದ ಸ್ಥಿತಿ. ಒಂಟಿತನ ಒಬ್ಬನೇ ಇರುವ ನೋವ ಹೇಳಿದರೆ, ಏಕಾಂತ ಒಬ್ಬನೇ ಇರುವ ಸೊಬಗ ತೋರುವುದು. ಏಕಾಂತದಲ್ಲಿ ಬರಹಗಾರನೊಬ್ಬ ಅರ್ಥವಾಗದ ಸಂಗತಿಗಳಿಗೆ ಅರ್ಥ ಹುಡುಕುತ್ತಾನೆ, ಸಂಗೀತಗಾರ ಹೊಸ ಆಯಾಮಗಳ ಕುರಿತು ಧ್ಯಾನಿಸುತ್ತಾನೆ, ವಿವಿಧ ಸ್ತರಗಳವರು ತಮ್ಮ ತಮ್ಮ ಅಭಿರುಚಿಗೆ ತಕ್ಕಂತೆ ಮುಂದುವರೆಯುವ ಕುರಿತು ಚಿಂತಿಸುತ್ತಾರೆ, ಸಾಧಕ ಬದುಕಿನ ಅರ್ಥ ತಿಳಿಯುವ ಪ್ರಯತ್ನ ನಡೆಸುತ್ತಾನೆ. ಆಗ ಅವರುಗಳ ಜೊತೆಗಿರುವುದು, ದಾರಿ ತೋರುವುದು ಅವರ ಅಂತರಂಗ. ತಪ್ಪುಗಳನ್ನು ಇತರರ ಎದುರಿಗೆ ಒಪ್ಪಿಕೊಳ್ಳದಿದ್ದರೂ ಅಂತರಂಗದ ಎದುರು ತಲೆಬಾಗಲೇಬೇಕು, ಗೋಚರಿಸದ ಸತ್ಯ ಗೋಚರಿಸುವುದು ಆಗಲೇ. ಅದೇ ಏಕಾಂತದ ಮಹಿಮೆ. ಏಕಾಂತ ಪ್ರೌಢತೆಯ ಸಂಕೇತ. ಏಕಾಂತದಲ್ಲಿ ಚಟುವಟಿಕೆಗಳ ಉದಯವಾಗುತ್ತದೆ, ಅಲ್ಲಿ ಚಲನೆಯಿಲ್ಲದ ಕ್ರಿಯೆಯಿದೆ, ಶ್ರಮವಿರದ ಕೆಲಸವಿದೆ, ಕಣ್ಣು ಮೀರಿದ ದೃಷ್ಟಿಯಿದೆ, ಬಯಕೆ ಮೀರಿದ ಆಸೆಯಿದೆ, ಅನಂತ ತೃಪ್ತಿಯ ಭಾವವಿದೆ. ಏಕಾಂತ ತನ್ನತನವನ್ನು ಬೆಳೆಸುತ್ತದೆ. ಅಂತರಂಗ ಬಹಿರಂಗಕ್ಕೆ ಹೊಂದಿಕೆಯಾಗದಿದ್ದರೆ ಒಂಟಿತನ ಕಾಡುತ್ತದೆ. ಏಕಾಂತ ಹೊಂದಿಕೆ ಮಾಡಿಕೊಳ್ಳುವ ದಾರಿ ತೋರುತ್ತದೆ, ಒಂಟಿಯಲ್ಲವೆಂಬ ಭಾವಕ್ಕೆ ಇಂಬು ಕೊಡುತ್ತದೆ, ನಾವು ನಾವಾಗಿರಲು ಏಕಾಂತದಲ್ಲಿ ಮಾತ್ರ ಸಾಧ್ಯ. ಸಮೂಹದಲ್ಲಿ ಮತ್ತು ಇತರರೊಂದಿಗೆ ಇದ್ದಾಗ ನಾವು ನಮ್ಮತನವನ್ನು ಕಳೆದುಕೊಳ್ಳುತ್ತೇವೆ ಎಂಬುದು ನಿತ್ಯ ಸತ್ಯ. ಇತರರು ಏನೆಂದುಕೊಳ್ಳುತ್ತಾರೆಂದೋ, ತಪ್ಪು ತಿಳಿಯುತ್ತಾರೆಂದೋ ಅಥವಾ ಯಾರನ್ನಾದರೂ ಮೆಚ್ಚಿಸುವುದಕ್ಕಾಗಿಯೋ ಇಷ್ಟವಿಲ್ಲದಿದ್ದರೂ ನಮ್ಮತನಕ್ಕೆ ಹೊರತಾಗಿ ವರ್ತಿಸುತ್ತೇವೆ, ಪರಿಸ್ಥಿತಿಯೊಂದಿಗೆ ರಾಜಿಯಾಗುತ್ತೇವೆ. ಏಕಾಂತದಲ್ಲಿ ಅಂತರಂಗ ಬಹಿರಂಗಗಳಿಗೆ ಹೊಂದಿಕೆಯಿರುತ್ತದೆ ಮತ್ತು ಅದರಿಂದಾಗಿ ಸಂತೋಷವಿರುತ್ತದೆ. ಸಾಧನೆಗೆ, ಧ್ಯಾನಕ್ಕೆ, ಮನನಕ್ಕೆ, ವಿಮರ್ಶೆಗೆ, ಹೇಗಿರಬೇಕೆಂದು ನಿರ್ಧರಿಸುವುದಕ್ಕೆ, ಉತ್ತಮ ರೀತಿಯಲ್ಲಿ ಮುಂದುವರೆಯುವುದಕ್ಕೆ ಏಕಾಂತದಲ್ಲಿ ಅವಕಾಶವಿದೆ. ಇತರರನ್ನು ಕೈಯಿಂದ ಮುಟ್ಟುವುದಕ್ಕೂ ಹೃದಯದಿಂದ ಮುಟ್ಟುವುದಕ್ಕೂ ವ್ಯತ್ಯಾಸ ತಿಳಿಯುವುದು ಏಕಾಂತದಲ್ಲೇ.

 -ಕ.ವೆಂ.ನಾಗರಾಜ್.