ಒಳ್ಳೆಯತನದ ಅಳತೆಗೋಲು

ಒಳ್ಳೆಯತನದ ಅಳತೆಗೋಲು

ರಸಭರಿತ ಫಲಮೂಲ ಕೊಂಬೆ ತಾನಲ್ಲ

ಫಲಸತ್ವ ಸಾಗಿಪ ಮಾರ್ಗ ತಾನಹುದು|

ಮಾಡಿದೆನೆನಬೇಡ ನಿನದೆನಬೇಡ

ಜಗವೃಕ್ಷರಸ ಹರಿವ ಕೊಂಬೆ ನೀ ಮೂಢ||

     ಕೊಂಬೆಯಲ್ಲಿ ಗೊಂಚಲು ಗೊಂಚಲಾಗಿ ಬಿಟ್ಟ ಫಲಗಳನ್ನು ಕಂಡು ಕೊಂಬೆ ತನ್ನಿಂದ ಈ ಫಲಗಳು ಎಂದು ಹೆಮ್ಮೆ ಪಡಬಹುದೇ? ಮರದ ಬೇರು, ವಿವಿಧ ಅಂಗಾಂಗಗಳು ನೆಲ, ಜಲ, ಗಾಳಿ, ಬೆಳಕುಗಳಿಂದ ಪಡೆದ  ಸತ್ವಗಳು ಕೊಂಬೆಯ ಮೂಲಕ ಸಾಗಿ ರೂಪಿತವಾದುದೇ ಫಲ. ಅದಕ್ಕೆ ಕೊಂಬೆಯೂ ಸಹಕಾರಿಯೇ ಹೊರತು ಅದೇ ಮೂಲವಲ್ಲ. ಅದೇ ರೀತಿ ನಾವು ಏನನ್ನು ಮಾಡಿದ್ದೇವೆ, ಸಾಧಿಸಿದ್ದೇವೆ ಎಂದು ಅಂದುಕೊಳ್ಳುತ್ತೀವೋ ಅದಕ್ಕೆ ನಾವೂ ಕಾರಣರು ಎಂದಷ್ಟೇ ಹೇಳಿಕೊಳ್ಳಬಹುದು. ನಾವೇ ಕಾರಣರು ಎಂದು ಹೇಳಲಾಗದು. ನಾವು ವಾಹಕಗಳಷ್ಟೆ. ಒಳ್ಳೆಯ ವಾಹಕಗಳಾಗಿದ್ದಲ್ಲಿ ಒಳ್ಳೆಯ ಫಲಗಳು, ಕೆಟ್ಟದಾಗಿದ್ದಲ್ಲಿ ಕೊಳೆತ, ಕೆಟ್ಟ ಫಲಗಳು ಗೋಚರಿಸುತ್ತವೆ.

     ಕಲ್ಮಶಭರಿತ ನೀರನ್ನು ಶುದ್ಧವಾದ ಪಾತ್ರೆಗೆ ಹಾಕಿದಾಕ್ಷಣ ನೀರು ಶುದ್ಧವಾಗುವುದಿಲ್ಲ. ಅದೇ ರೀತಿ ಶುದ್ಧವಾದ ನೀರನ್ನು ಕಲ್ಮಶಭರಿತ ಪಾತ್ರೆಗೆ ಹಾಕಿದರೆ ನೀರೂ ಅಶುದ್ಧವಾಗುತ್ತದೆ. ಆದ್ದರಿಂದ ನಾವು ಶುದ್ಧ ವಾಹಕಗಳಾಗಬೇಕೆಂದರೆ ಎಚ್ಚರಿಕೆಯಿಂದಿರಬೇಕು. ನಮ್ಮ ಆಹಾರ -ಅಂದರೆ, ಕೇವಲ ತಿನ್ನುವುದು, ಕುಡಿಯುವುದು ಮಾತ್ರ ಅಲ್ಲ ನೋಡುವುದು, ಕೇಳುವುದು, ಗ್ರಹಿಸುವುದು, ಇತ್ಯಾದಿಗಳೂ ಸೇರಿ- ಶುದ್ಧವಾಗಿರಬೇಕು. ಒಂದು ಉದಾಹರಣೆ ನೋಡೋಣ: ಸ್ನೇಹಿತರೊಬ್ಬರ ಮನೆಯಲ್ಲಿ ಮಾತನಾಡುತ್ತಿದ್ದಾಗ ಅವರ ೩ ವರ್ಷದ  ಚಿಕ್ಕ ಮಗು ಒಬ್ಬರು ಹಿರಿಯರನ್ನು ಕುರಿತು "ನೀನು ಪೆದ್ದ, ದಂಡ" ಎಂದಿತು. ಚಿಕ್ಕ ಮಗುವಿನ ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಹಿರಿಯರು ಯಾವುದೋ ಕಾರಣಕ್ಕೆ ಹೊರಗೆ ಹೋದಾಗ ಅಲ್ಲಿದ್ದ ಮಗುವಿನ ಸಂಬಂಧಿಯೊಬ್ಬರು  "ಮಗು  ಸರಿಯಾಗಿ ಹೇಳಿತು, ಅವರು ಮಾಡುವುದೂ ಹಾಗೆಯೇ, ಇರುವುದೂ ಹಾಗೆಯೇ"  ಎಂದರು.  ಅಲ್ಲೇ ಕುಳಿತಿದ್ದ ಮಗು ಖುಷಿಯಿಂದ ಇದನ್ನು ಕೇಳಿಸಿಕೊಂಡಿತು. ಹಿರಿಯರಿಗೂ ಆ  ಸಂಬಂಧಿಗೂ ಅಷ್ಟಾಗಿ ಸರಿಯಿರಲಿಲ್ಲ. ಅದು ಮಗುವಿನ ಮೂಲಕ ಹೊರಬಿತ್ತು ಅಷ್ಟೆ. ಅವರು ಹಿರಿಯರ ಬೆನ್ನ ಹಿಂದೆ ಯಾವಾಗಲೋ ಆಡಿದ ಮಾತುಗಳನ್ನು ಮಗು ಪುನರುಚ್ಛರಿಸಿತ್ತಷ್ಟೆ ಹೊರತು ಅದು ಮಗುವಿನ ಸ್ವಂತ ಮಾತಾಗಿರಲಿಲ್ಲ. ಈಗ ಅವರು ಆಡಿದ ಮಾತಿನಿಂದ ಮಗುವಿಗೆ ತಾನು ಮಾಡಿದ್ದು ಸರಿ ಎಂಬ ಶಹಭಾಸಗಿರಿ ಕೊಟ್ಟಂತಾಗಿ ಮುಂದೆ ಇಂತಹ ಮಾತುಗಳನ್ನು ಹೆಚ್ಚು ಹೆಚ್ಚಾಗಿ ಆಡಲು ಪ್ರೇರೇಪಿಸಿದಂತೆ ಆಯಿತು. ಕಲುಷಿತ ಭಾವನೆಯನ್ನು ವಾಹಕರಾಗಿ ಅವರು ಆ ಮಗುವಿಗೂ ಹರಿಸಿದ್ದರು. ಮಕ್ಕಳು ನಿಷ್ಕಲ್ಮಶವಾದ ಪಾತ್ರೆಯಿದ್ದಂತೆ. ಆ ಪಾತ್ರೆಗೆ ಕಲ್ಮಶಗಳನ್ನು ತುಂಬಬಾರದಲ್ಲವೇ?

     ಮನುಷ್ಯನ ಸ್ವಭಾವವೇ ವಿಚಿತ್ರ. ತನಗೆ ಬೇಕಾದವರ ಬಗ್ಗೆ ಯಾರಾದರೂ ಪ್ರಿಯವಾದ ವಿಷಯ ಹೇಳಿದರೆ ಅದಕ್ಕೆ ಮತ್ತಷ್ಟು ಒತ್ತುಕೊಟ್ಟು ಇನ್ನೊಬ್ಬರಿಗೆ ಹೇಳುತ್ತಾನೆ. ತನಗಾಗದವರ ಬಗ್ಗೆ ಒಳ್ಳೆಯ ಸಂಗತಿ ಕೇಳಿದರೆ ಅದನ್ನು ತಿರುಚಿ ಕೆಟ್ಟ ಅಭಿಪ್ರಾಯ ಸೇರಿಸಿ ಹೇಳುತ್ತಾನೆ. ಕೆಟ್ಟ ವಿಷಯ ಕೇಳಿದರಂತೂ ಸಂಭ್ರಮಿಸಿ ಎಲ್ಲರಿಗೂ ಹರಡುತ್ತಾನೆ. ಆತ್ಮೀಯರು ಸೀನಿದರೂ ಏನೋ ಆಯಿತೆಂದು ಕಳವಳ ಪಡುತ್ತಾರೆ. ಇಷ್ಟಪಡದವರು ಗಂಭೀರ ಕಾಯಿಲೆಯಿಂದ ನರಳುತ್ತಿದ್ದರೂ ಅವರಿಗೇನಾಗಿದೆ? ಇನ್ನೂ ಗಟ್ಟಿಗಡತವಾಗಿದ್ದಾರೆ. ಇನ್ನೂ ಎಷ್ಟು ಜನರನ್ನು ಹಾಳುಮಾಡಬೇಕೋ? ಎಂದು ಉದ್ಗರಿಸುತ್ತಾರೆ. ಸಂಬಂಧಗಳು ಹಾಳಾಗುವುದು ಇಂತಹ ನಡವಳಿಕೆಗಳಿಂದಲೇ.

     ಇನ್ನು ಕೆಲವರಿರುತ್ತಾರೆ. ಕೆಟ್ಟ ವಿಷಯ ಕೇಳಿದರೆ ಕೇಳಿಸಿಕೊಂಡು ಸುಮ್ಮನಾಗುತ್ತಾರೆಯೇ ಹೊರತು ಅದನ್ನು ಹರಡಲು ಹೋಗುವುದಿಲ್ಲ. ಒಳ್ಳೆಯ ವಿಷಯಗಳಿಗೆ ಸ್ಪಂದಿಸುತ್ತಾರೆ. ಇವರು ಒಳ್ಳೆಯ ವಾಹಕರು. ಜನ ಇವರ ಮಾತುಗಳಿಗೆ ಗೌರವ ಕೊಡುತ್ತಾರೆ. ಸಂಬಂಧಗಳು ಉಳಿಯುವುದು, ಬೆಳೆಯುವುದು ಇಂತಹವರಿಂದಲೇ! ಕುಟುಂಬದ ಮುಖ್ಯಸ್ಥ ಮುಖ್ಯ ವಾಹಕನಾದರೆ ಕುಟುಂಬದ ಸದಸ್ಯರುಗಳು ಉಪವಾಹಕಗಳಿದ್ದಂತೆ. ವಾಹಕ, ಉಪವಾಹಕಗಳಲ್ಲಿ ಯಾವುದೇ ಒಂದು ಸರಿಯಿಲ್ಲದಿದ್ದರೂ ಒಂದು ಘಟಕವಾಗಿ ಕುಟುಂಬಕ್ಕೇ ಕೆಟ್ಟ ಹೆಸರು ಬರುತ್ತದೆ. ಒಬ್ಬರಿದ್ದಂತೆ ಇನ್ನೊಬ್ಬರು ಇಲ್ಲದಿರುವುದರಿಂದ ಇದಕ್ಕೆ ಪರಿಹಾರ ಕಷ್ಟಸಾಧ್ಯ. ಬಂದದ್ದನ್ನು ಸ್ವೀಕರಿಸಿ ನಡೆಯುವುದೊಂದೇ ಉಳಿಯುವ ಮಾರ್ಗ. ಒಬ್ಬರ ಕಾರಣದಿಂದ ಕುಟುಂಬದ ಎಲ್ಲರಿಗೂ ಕೆಟ್ಟ ಹೆಸರು ಬರುವಂತಾಗುವುದು ಒಳ್ಳೆಯ ಲಕ್ಷಣವಂತೂ ಅಲ್ಲ. ನಾವು ಆಡುವ ಮಾತುಗಳು ಹೇಗಿರಬೇಕೆಂದು ಋಗ್ವೇದದ ಈ ಮಂತ್ರ ಹೇಳುತ್ತಿದೆ:

ಸಕ್ತುಮಿವ ತಿತಉನಾ ಪುನಂತೋ ಯತ್ರ ಧೀರಾ ಮನಸಾ ವಾಚಮಕ್ರತ |

ಅತ್ರಾ ಸಖಾಯಃ ಸಖ್ಯಾನಿ ಜಾನತೇ ಭದ್ರೈಷಾಂ ಲಕ್ಷ್ಮೀರ್ನಿಹಿತಾಧಿ ವಾಚಿ || (ಋಕ್. ೧೦.೭೧.೨.)

     ಜರಡಿಯಿಂದ ಹಿಟ್ಟನ್ನು ಶೋಧಿಸುವಂತೆ ಬುದ್ಧಿವಂತರು ಆಡುವ ಮಾತನ್ನು ಮನಸ್ಸಿನಲ್ಲಿ ಶೋಧಿಸಿ ಮಾತನಾಡುತ್ತಾರೆ. ಆಲೋಚಿಸಿ ಮಾತನಾಡುವವರಿಂದ ಜನರಲ್ಲಿ ಸ್ನೇಹಭಾವನೆ ಬೆಳೆಯುತ್ತದೆ. ಮನುಷ್ಯನ ನಿಜವಾದ ಸಂಪತ್ತು ಮಾತಿನಲ್ಲಿಯೇ ಅಡಗಿದೆ ಎಂಬುದು ಈ ಮಂತ್ರದ ಅರ್ಥ.

     ಒಳ್ಳೆಯತನದ ಅಳತೆಗೋಲು ನಮ್ಮಲ್ಲೇ ಇದೆ. ಕುಟುಂಬದ ಸದಸ್ಯರುಗಳ, ಬಂಧುಗಳ, ಸ್ನೇಹಿತರ ಪಟ್ಟಿ ಮಾಡೋಣ. ಆ ಹೆಸರುಗಳ ಮುಂದೆ ಎರಡು ಕಲಮುಗಳು ಇರಲಿ. ಒಂದು ಕಲಮಿನಲ್ಲಿ ನಮ್ಮ ದೃಷ್ಟಿಯಲ್ಲಿ  ಅವರು ಒಳ್ಳೆಯವರೋ, ಕೆಟ್ಟವರೋ ಎಂಬುದನ್ನು ದಾಖಲಿಸಿ, ಇನ್ನೊಂದಲ್ಲಿ ಅವರ ದೃಷ್ಟಿಯಲ್ಲಿ ನಾವು  ಒಳ್ಳೆಯವರೋ, ಕೆಟ್ಟವರೋ ಎಂಬುದನ್ನು ದಾಖಲಿಸೋಣ. ಆಶ್ಚರ್ಯವೆಂದರೆ ಸಾಮಾನ್ಯವಾಗಿ ಎರಡು ಕಲಮುಗಳ ವಿವರ ಒಂದೇ ಆಗಿರುತ್ತದೆ. ನಾವು ಒಳ್ಳೆಯವರೆಂದು ಹೇಳುವವರು ನಮ್ಮನ್ನೂ ಒಳ್ಳೆಯವರೆಂದು ಭಾವಿಸುವರು. ನಾವು ಕೆಟ್ಟವರೆನ್ನುವವರು ನಮ್ಮನ್ನು ಒಳ್ಳೆಯವರೆಂದು ಹೇಳಲಾರರು. ಕೊನೆಯಲ್ಲಿ ಎಷ್ಟು ಒಳ್ಳೆಯವರು ಮತ್ತು ಕೆಟ್ಟವರು ಎಂಬುದನ್ನು ಲೆಕ್ಕ ಹಾಕಿದಾಗ ಒಳ್ಳೆಯವರು ಎಂಬ ಸಂಖ್ಯೆ ಜಾಸ್ತಿ ಬಂದರೆ ನಾವು ಒಳ್ಳೆಯವರೇ. ಕೆಟ್ಟವರು ಎಂಬುದು ಹೆಚ್ಚಾಗಿದ್ದರೆ ತಿದ್ದಿಕೊಳ್ಳುವ, ಬದಲಾಗುವ ಅಗತ್ಯವಿದೆ ಎಂದೇ ಅರ್ಥ. ಈ ಜಗತ್ತು ಕನ್ನಡಿಯಿದ್ದಂತೆ. ಒಳ್ಳೆಯವರಿಗೆ ಒಳ್ಳೆಯದಾಗಿ, ಕೆಟ್ಟವರಿಗೆ ಕೆಟ್ಟದಾಗಿ ಕಾಣುತ್ತದೆ. ಕನ್ನಡಿಯ ಪ್ರತಿಬಿಂಬವೂ ಅಷ್ಟೆ. ನಾವು ಎಷ್ಟು ದೂರದಲ್ಲಿರುತ್ತೇವೋ ಪ್ರತಿಬಿಂಬವೂ ಅಷ್ಟೇ ದೂರದಲ್ಲಿರುತ್ತದೆ.

     ಈ ಬದುಕು ಮೂರುದಿನದ್ದು ಎಂದು ಗೊತ್ತಿದ್ದರೂ ಚಿರಂಜೀವಿಗಳು ಎಂಬಂತೆ ವರ್ತಿಸುತ್ತೇವೆ. ಇತರರ ಬಗ್ಗೆ ಅವನು ಏಕೆ ಹಾಗಾಡುತ್ತಾನೆ? ಹೋಗುವಾಗ ಎಲ್ಲಾ ಹೊತ್ತುಕೊಂಡು ಹೋಗುತ್ತಾನಾ? ಎಂದು ಹೇಳುವ ನಾವು ಅದೇ ತತ್ವವನ್ನು ನಮಗೆ ಅನ್ವಯಿಸಿಕೊಳ್ಳುತ್ತೇವೆಯೇ? ಜೀವನ ಪೂರ್ತಿ ಉತ್ತಮ ರೀತಿಯಲ್ಲಿ ಬಾಳಲು ಸಿದ್ಧತೆ ಮಾಡಿಕೊಳ್ಳುವುದರಲ್ಲಿಯೇ ಕಳೆಯುವ ನಾವು ಉತ್ತಮವಾಗಿ ಬಾಳುವುದಿಲ್ಲ ಎಂಬುದು ವಿಪರ್ಯಾಸದ ಸಂಗತಿ.

     ಸಂಬಂಧಗಳಲ್ಲಿ ಬರುವ ದೊಡ್ಡ ಸವಾಲೆಂದರೆ  ಏನನ್ನಾದರೂ ಪಡೆಯುವ ಸಲುವಾಗಿಯೇ ಸಂಬಂಧಗಳನ್ನು  ಹೆಚ್ಚಿನವರು ಬೆಳೆಸುವುದೇ ಆಗಿದೆ. ಅವರು ಇತರರು ತಮಗೆ ಒಳಿತು ಮಾಡಲಿ ಎಂದು ಬಯಸಿ ಸಂಬಂಧ ಬೆಳೆಸುತ್ತಾರೆ. ಸಂಬಂಧಗಳು ಏನನ್ನಾದರೂ ಕೊಡುವ ಸಲುವಾಗಿ, ಪಡೆಯುವ ಸಲುವಾಗಿ ಅಲ್ಲ ಎಂದುಕೊಂಡರೆ ಸಂಬಂಧಗಳು ಉಳಿಯುತ್ತವೆ, ಬೆಳೆಯುತ್ತವೆ.  ಬರ್ನಾರ್ಡ್ ಶಾ ಹೇಳಿದಂತೆ ಸಾಯುವ ಮುನ್ನ ನಮ್ಮಲ್ಲಿರುವ ಒಳ್ಳೆಯದನ್ನೆಲ್ಲಾ ಕೊಟ್ಟುಬಿಡೋಣ. ಸಂತೋಷ ಹಂಚಿಕೊಳ್ಳೋಣ; ಅದು ದ್ವಿಗುಣಗೊಳ್ಳುತ್ತದೆ. ದುಃಖವನ್ನೂ ಹಂಚಿಕೊಳ್ಳೋಣ; ಅದು ಅರ್ಧ ಕಡಿಮೆಯಾಗುತ್ತದೆ.

 -ಕ.ವೆಂ.ನಾಗರಾಜ್.