ಛಲಗಾರ ದುರ್ಯೋಧನ

ಛಲಗಾರ ದುರ್ಯೋಧನ

ಪುಸ್ತಕದ ಲೇಖಕ/ಕವಿಯ ಹೆಸರು
ಜಿ.ಎಂ.ಕೆ.
ಪ್ರಕಾಶಕರು
ಸಪ್ನ ಬುಕ್ ಹೌಸ್, ಗಾಂಧಿನಗರ, ಬೆಂಗಳೂರು - ೫೬೦೦೦೯
ಪುಸ್ತಕದ ಬೆಲೆ
ರೂ. ೩೫.೦೦, ಮುದ್ರಣ: ಜೂನ್ ೨೦೨೩

ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಮೂರನೇ ಪುಸ್ತಕ ‘ಛಲಗಾರ ದುರ್ಯೋಧನ'. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ದುರ್ಯೋಧನನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ ಮಹಾಕಾವ್ಯದಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಮಾನವ ಸಹಜ ಗುಣಗಳಿಂದ, ಭಾವಗಳಿಂದ ತೊಳಲಾಡುತ್ತ ನಮ್ಮ ಮಧ್ಯೆ ಈಗ ಕೂಡಾ ನಲಿದಾಡುತ್ತಿರುವಂತೆ ಭಾಸವಾಗುತ್ತದೆ. ಅವರ ಸಂಗದಲ್ಲಿ ನಮ್ಮ ವ್ಯಕ್ತಿತ್ವ ಇನ್ನಷ್ಟು ಹಸನಾಗುತ್ತದೆ, ಹಾಗೆಯೇ ದುಷ್ಟತನ, ಮಾತ್ಸರ್ಯದಂತಹ ದುರ್ಗುಣಗಳನ್ನು ತೊರೆಯಬೇಕೆಂಬ ಪ್ರಜ್ಞೆ ಜಾಗೃತವಾಗುತ್ತದೆ. ಮಹಾಭಾರತವನ್ನು ಕೇವಲ ದಾಯಾದಿ ಕಥೆಯೆಂದು ಭಾವಿಸದೇ ಮಾನವ ಜನಾಂಗಕ್ಕೆ ಸದಾ ಬೆಳಕು ತೋರುವ ಮಹಾಕೃತಿಯೆಂದು ವಿದ್ವಾಂಸರು ಪರಿಗಣಿಸಿದ್ದಾರೆ. ಈ ಮಾಲಿಕೆಯಲ್ಲಿ ಮಹಾಭಾರತದಲ್ಲಿ ಬರುವ ಹತ್ತು ಪ್ರಮುಖ ಪಾತ್ರಗಳ ಪರಿಚಯವನ್ನು ಕೊಡಲಾಗಿದೆ. ಕೃತಿಯ ಮಿತಿಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಲು ಪ್ರಯತ್ನಿಸಲಾಗಿದೆ. ಪ್ರತಿ ಪಾತ್ರದ ಕಥೆಯನ್ನು ಮೊದಲಿನಿಂದ ಕಡೆಯವರೆಗೆ ಸಮಗ್ರವಾಗಿ ಆದರೆ ಸಂಕ್ಷಿಪ್ತವಾಗಿ ನಿರೂಪಿಸಲು ಪ್ರಯತ್ನಿಸಲಾಗಿದೆ. ಓದುಗರು ಈ ಕೃತಿಯನ್ನು ಆದರದಿಂದ ಸ್ವೀಕರಿಸುವರೆಂಬ ನಂಬಿಕೆ ನಮ್ಮದು" ಎಂದಿದ್ದಾರೆ. 

'ಛಲಗಾರ ದುರ್ಯೋಧನ' ಕೃತಿಯು ಆತನ ಹುಟ್ಟಿನ ವಿಚಿತ್ರ ಸನ್ನಿವೇಶದ ಮೂಲಕ ಪ್ರಾರಂಭವಾಗುತ್ತದೆ. ಹೊಟ್ಟೆ ಕಿಚ್ಚಿಗೆ ಹುಟ್ಟಿದ ನೂರು ಮತ್ತೊಂದು ಮಕ್ಕಳಲ್ಲಿ ಮೊದಲನೆಯವನಾದ ದುರ್ಯೋಧನ ತನ್ನ ಬಾಲ್ಯದಿಂದಲೂ ತನ್ನ ಚಿಕ್ಕಪ್ಪನ ಮಕ್ಕಳಾದ ಪಾಂಡವರ ಕುರಿತಾಗಿ ದ್ವೇಷ ಭಾವನೆಯನ್ನು ಬೆಳೆಸಿಕೊಂಡಿರುತ್ತಾನೆ. ಅದರಲ್ಲೂ ತನ್ನ ಸಮಕಾಲೀನ ಪಾಂಡವನಾದ ಭೀಮನ ಬಗ್ಗೆ ವಿಪರೀತ ದ್ವೇಷ. ಆತನಿಗೆ ದುರ್ಯೋಧನ ನೀಡುವ ಕಾಟಗಳು ಹಲವಾರು. ತನ್ನ ಸೋದರ ಮಾವ ಶಕುನಿಯ ಮಾತನ್ನು ಕೇಳಿ ಪಾಂಡವರನ್ನು ಪಗಡೆಯಾಟ ಆಡಲು ಕರೆದು ಮೋಸದಿಂದ ಸೋಲಿಸುತ್ತಾನೆ. ಈ ಕೃತಿಯಲ್ಲಿ ದುರ್ಯೋಧನನಿಗೆ ಗಂಧರ್ವರಾಜನಿಂದ ಗರ್ವಭಂಗವಾದ ಬಗ್ಗೆ, ವಿರಾಟ ನಗರದಲ್ಲಿ ಅಜ್ಞಾತವಾಸದಲ್ಲಿದ್ದ ಪಾಂಡವರನ್ನು ಸಮಯಕ್ಕೆ ಸರಿಯಾಗಿ ಗುರುತಿಸಲಾಗದೇ ಸೋಲಾದ ಬಗ್ಗೆ, ಯುದ್ಧ ಬೇಡ ಎಂದು ಪಾಂಡವರ ಪರ ರಾಯಭಾರಿಯಾಗಿ ಬಂದ ಶ್ರೀಕೃಷ್ಣನನ್ನು ಬಂಧಿಸಿದ ಬಗ್ಗೆ, ಕುರುಕ್ಷೇತ್ರ ಯುದ್ಧದಲ್ಲಿ ಎಲ್ಲವನ್ನೂ, ಎಲ್ಲರನ್ನೂ ಕಳೆದುಕೊಂಡು ಕೊನೆಗೆ ಭೀಮನ ಜೊತೆ ಗಧಾಯುದ್ಧದಲ್ಲಿ ಸೋತು ಮರಣವನ್ನಪ್ಪಿದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ದುರ್ಯೋಧನ ಎಷ್ಟೇ ಕೆಟ್ಟವನಾಗಿದ್ದರೂ ಆತ ಗೆಳೆತನ ಪದಕ್ಕೆ ಪರ್ಯಾಯವಾಗಿದ್ದ. ಕರ್ಣನ ಗೆಳೆತನವನ್ನು ಬಯಸಿ ಆತನಿಗೆ ಅಂಗ ರಾಜ್ಯವನ್ನೇ ದಾನವಾಗಿ ಕೊಡುತ್ತಾನೆ.  

ಕೃತಿಗೆ ಪುಟಗಳ ಮಿತಿ ಇರುವುದರಿಂದ ಸಂಕ್ಷಿಪ್ತವಾಗಿ ದುರ್ಯೋಧನನ ಮಾಹಿತಿಯನ್ನು ನೀಡಲಾಗಿದೆ. ಇದು ಮಕ್ಕಳಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಪೌರಾಣಿಕ ಪ್ರಬಂಧ, ಭಾಷಣ, ನಾಟಕ ರಚನೆಗೆ ಸಹಕಾರಿಯಾಗಬಲ್ಲದು. ಪುಸ್ತಕದ ಒಳಪುಟಗಳಲ್ಲಿ ಅಲ್ಲಲ್ಲಿ ಸೊಗಸಾದ ರೇಖಾಚಿತ್ರಗಳನ್ನು ನೀಡಲಾಗಿದೆ. ೫೦ ಪುಟಗಳ ಈ ಪುಟ್ಟ ಕೃತಿಯು ‘ಛಲಗಾರ ದುರ್ಯೋಧನ' ನ ಬಗ್ಗೆ ಬಹಳಷ್ಟು ವಿಷಯಗಳನ್ನು ಚುಟುಕಾಗಿ ತಿಳಿಸುವಲ್ಲಿ ಸಹಕಾರಿಯಾಗಿದೆ.