ನಮ್ಮ ಹೆಮ್ಮೆಯ ಭಾರತ (ಭಾಗ 37 - 38)

ನಮ್ಮ ಹೆಮ್ಮೆಯ ಭಾರತ (ಭಾಗ 37 - 38)

೩೭.ಅಮುಲ್: ಹಾಲು ಉತ್ಪಾದಕರ ಬೃಹತ್ ಒಕ್ಕೂಟ
ಅಮುಲ್ ಎಂದರೆ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್. ಗುಜರಾತಿನ ಆನಂದ್ ಎಂಬ ಊರಿನಲ್ಲಿ ಶುರುವಾದ ಹಾಲು ಉತ್ಪಾದಕರ ಪುಟ್ಟ ಸಂಘಟನೆ ಜಗತ್ತಿನ ಮುಂಚೂಣಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಕೈಗಾರಿಕೆಯಾಗಿ ಬೆಳೆದ ಕಥೆ. ಈ ಸಹಕಾರಿ ಸಂಘಟನೆಯ ಯಶಸ್ಸಿಗೆ ಕಾರಣರು ಡಾ. ವರ್ಗೀಸ್ ಕುರಿಯನ್. ಅವರು ಇದನ್ನು ಮೂವತ್ತು ವರುಷಗಳ ಕಾಲ ಮುನ್ನಡೆಸಿದರು. ಅವರ ಪುಸ್ತಕ "ಐ ಹ್ಯಾಡ್ ಎ ಡ್ರೀಮ್” ಈ ವಿಸ್ಮಯದ ಯಶೋಗಾಥೆಯ ಕಥನ.

“ಅಮುಲ್" ಹಲವು ಜಾಗತಿಕ ದಾಖಲೆಗಳ ಸರದಾರ. ಇದು ಜಗತ್ತಿನ ಅತಿ ದೊಡ್ಡ ಪ್ಯಾಕೆಟ್ ಹಾಲಿನ ಬ್ರಾಂಡ್ ಮತ್ತು ಅತಿ ದೊಡ್ಡ ಸಸ್ಯಾಹಾರಿ ಚೀಸ್ ಬ್ರಾಂಡ್. ಜೊತೆಗೆ, ಭಾರತದ ಅತ್ಯಂತ ದೊಡ್ಡ ಆಹಾರ ವಸ್ತುಗಳ ಬ್ರಾಂಡ್ ಅಮುಲ್.

“ಅಮುಲ್" ೨.೮ ದಶಲಕ್ಷ ಉತ್ಪಾದಕ-ಸದಸ್ಯರನ್ನು ಹೊಂದಿದ್ದು, ಸರಾಸರಿ ಹಾಲಿನ ಸಂಗ್ರಹ ದಿನಕ್ಕೆ ೧೦.೬ ದಶಲಕ್ಷ ಲೀಟರ್. ಆನಂದ್‌ನಲ್ಲಿ “ಅಮುಲ್" ಸ್ಥಾಪನೆ ಭಾರತದಂತಹ ಮಹಾನ್ ದೇಶದಲ್ಲಿ “ಹಾಲಿನ ಕ್ರಾಂತಿ”ಗೆ ನಾಂದಿಯಾಯಿತು. “ಅಮುಲ್" ಮಾದರಿಯಲ್ಲೇ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳ್ನಾಡು ಇತ್ಯಾದಿ ರಾಜ್ಯಗಳು ಹಾಲು ಉತ್ಪಾದಕರ ಒಕ್ಕೂಟಗಳನ್ನು ಸ್ಥಾಪಿಸಿ, ಅವೆಲ್ಲವೂ ಯಶಸ್ವಿಯಾಗಿವೆ. ಇದರಿಂದಾಗಿ, ಭಾರತ ಜಗತ್ತಿನಲ್ಲೇ ಅತ್ಯಂತ ಬೃಹತ್ ಹಾಲು ಮತ್ತು ಹಾಲಿನ ಉತ್ಪನ್ನಗಳ ದೇಶವಾಗಿದೆ.

೩೮.”ಆಪರೇಷನ್ ಫ್ಲಡ್” ಎಂಬ ಭಾರತದ ಮಹಾನ್ ಕ್ಷೀರ ಕ್ರಾಂತಿ
ಅದೊಂದು ಕಾಲವಿತ್ತು - ಭಾರತದ ಹಲವು ನಗರಗಳಲ್ಲಿ ಒಂದು ಲೀಟರ್ ಹಾಲಿಗಾಗಿ ಪರದಾಡಬೇಕಾದ ಕಾಲ. ಆದರೆ ಈಗ ಭಾರತದ ಎಲ್ಲ ಮಹಾನಗರ, ನಗರ ಮತ್ತು ಹಳ್ಳಿಗಳಲ್ಲಿ ಎಷ್ಟು ಬೇಕಾದರೂ ಹಾಲು ಲಭ್ಯ. ಇದಕ್ಕೆ ಕಾರಣ ಕ್ಷೀರಕ್ರಾಂತಿ.

ಇದೆಲ್ಲ ಶುರುವಾದದ್ದು ಹಾಲಿನ ಉತ್ಪಾದನೆ ಹೆಚ್ಚಿಸಲಿಕ್ಕಾಗಿ ರಾಷ್ಟ್ರೀಯ ಡೈರಿ ಅಭಿವೃದ್ಧಿ ನಿಗಮ (ಎನ್.ಡಿ.ಡಿ.ಬಿ.) ೧೯೭೦ರಲ್ಲಿ “ಆಪರೇಷನ್ ಫ್ಲಡ್” ಎಂಬ ಮಹಾಯೋಜನೆ ಜ್ಯಾರಿ ಮಾಡಿದಾಗ. ಇದು ಹಾಲಿನ ಕೊರತೆಯ ದೇಶವಾಗಿದ್ದ ಭಾರತವನ್ನು ಜಗತ್ತಿನ ಅತ್ಯಂತ ದೊಡ್ಡ ಹಾಲು ಉತ್ಪಾದಕ ದೇಶವಾಗಿ ಬದಲಾಯಿಸಿತು. ಇದರಿಂದಾಗಿ ಮಹಾನ್ ದೇಶ ಭಾರತದಲ್ಲಿ ಕೇವಲ ೩೦ ವರುಷಗಳಲ್ಲಿ ತಲಾ ಹಾಲಿನ ಲಭ್ಯತೆ ಇಮ್ಮಡಿಯಾಯಿತು; ಜೊತೆಗೆ ಹಾಲಿನ ಉತ್ಪಾದನೆ ಭಾರತದ ರೈತರ ಪ್ರಧಾನ ಆದಾಯದ ಮೂಲವಾಯಿತು.

ಗುಜರಾತಿನ ಆನಂದ್‌ನಲ್ಲಿ ಶುರುವಾದ ಹಾಲು ಉತ್ಪಾದಕರ ಸಹಕಾರಿ ಆಂದೋಲನದ ಮಾದರಿಯಲ್ಲೇ “ಆಪರೇಷನ್ ಫ್ಲಡ್” ಅನ್ನು ರೂಪಿಸಲಾಗಿತ್ತು. ಇದರ ಯಶಸ್ಸಿಗೆ ಎನ್.ಡಿ.ಡಿ.ಬಿ.ಯ ಅಧ್ಯಕ್ಷರಾಗಿದ್ದ ಡಾ. ವರ್ಗೀಸ್ ಕುರಿಯನ್ ಅವರ ಮುಂದಾಳುತನ ಪ್ರಧಾನ ಕಾರಣ. “ಅಮುಲ್" ಸ್ಥಾಪಕ ಚೇರ್-ಮನ್ ಆಗಿದ್ದ ಅವರು ಅದನ್ನು ೩೦ ವರುಷ ಮುನ್ನಡೆಸಿದವರು.

ಭಾರತದ ಲಕ್ಷಗಟ್ಟಲೆ ರೈತರಿಗೂ ಅವರ ಕುಟುಂಬಗಳಿಗೂ “ಆಪರೇಷನ್ ಫ್ಲಡ್” ಆರ್ಥಿಕ ಸ್ವಾತಂತ್ರ್ಯ ಒದಗಿಸಿತು. ಆದ್ದರಿಂದಲೇ ಜಗತ್ತಿನ ಬೇರೆ ಯಾವ ಕ್ರಾಂತಿಯೂ ಇದಕ್ಕೆ ಸಾಟಿಯಲ್ಲ.  

ಫೋಟೋ ೧: "ಅಮುಲ್" ಉತ್ಪನ್ನಗಳು

ಫೋಟೋ ೨: ಡಾ. ವರ್ಗೀಸ್ ಕುರಿಯನ್, ಮಿಲ್ಕ್ ಮ್ಯಾನ್ ಆಫ್ ಇಂಡಿಯಾ, ಭಾರತದ ಕ್ಷೀರಕ್ರಾಂತಿಯ ಪಿತಾಮಹ