ಮುಂಬಯಿ ಮುಖಗಳು ಭಾಗ ೧.....
ಸದಾ ತಡವಾಗಿ ಓಡುವ ಲೋಕಲ್ ಟ್ರೇನುಗಳ ರಭಸ, ಸತ್ತ ಮೀನುಗಳೇ ತುಂಬಿರುವ ಬುಟ್ಟಿಗಳ ನಾರು ವಾಸನೆ, ರೈಲು ಹಳಿಯುದ್ದಕ್ಕೂ ಮೈ-ಮರೆತು ಪ್ಲಾಸ್ಟಿಕ್ ತಂಬಿಗೆ ಹಿಡಿದು ಕೂತಿರುವ ಭಯ್ಯಾಗಳ ಕೄತಘ್ನತೆ, ಯಾವ ಬಾಂಬು ಎಲ್ಲಿ ಸಿಡಿಯುವುದೋ ಎಂಬ ಕರಿ ಭಯದ ನೆರಳಲ್ಲೇ ಎದ್ದು ಮೈ ಮುರಿಯುತ್ತದೆ ಮುಂಬಯಿ. ದೂರದ ಬ್ಯಾಂಡ್ ಸ್ಟಾಂಡ್ ನಲ್ಲಿ ಚರಸ್ ಸೇವಿಸಿ, ಹೈರಾಣಾಗಿ, ಗೆಳೆಯನ ಅಪ್ಪನ ಕ್ವಾಲಿಸ್ ಗಾಡಿಯಲ್ಲಿ ಕುಳಿತು ಮನೆಗಡೆ ಹಿಂದಿರುಗುವ ಯೋಚನೆಯಲ್ಲಿ ಕಾಲ್ ಸೆಂಟರ್ ನ ಹೈ-ಟೆಕ್ ಹೈಕಳು ಚರ್ಚಿಸುತ್ತಿದ್ದರೆ, ಈಚೆ ಗಡದ್ದಾಗಿ ಹೊದ್ದು ಮಲಗಿದ ಲಕ್ಷ್ಮಣ ಭಾವೂ ಸುರ್ವೆ ಚಾಳಿನ ಹದಿನೇಳನೇ ನಂಬರ್ ಮನೆಯಲ್ಲಿ ದೀಪ ಝಗ್ಗನೇ ಬೆಳಗುತ್ತದೆ. ವಸಂತರಾವ್ ವಿಠೋಬಾ ಪಾರಂಗೆಯ ಅರೆ-ತೆರೆದ ಕಣ್ಣುಗಳು, ಆತನಿಗೆ ಎಂದೂ ಮೋಸ ಮಾಡಿಲ್ಲ. ಅಡ್ಡಾದಿಡ್ಡಿ ಮಲಗಿದ ಮಕ್ಕಳಿಗೆ ಕಾಲು ತಾಕದಂತೆ ಎಚ್ಚರವಹಿಸಿ, ಚೊಂಬು ಹಿಡಿದು ಆತ ಮೆಲ್ಲನೆ ಹೊರಬರುತ್ತಾನೆ. ಹದಿನಾರು ವರ್ಷಗಳೇ ಕಳೆದು ಹೋಗಿವೆ ನೋಡಿ, ಆತ ಚಾಳಿನ ಪಾಯಖಾನೆಯ ಬಳಕೆಗಾಗಿ ಲೈನಿನಲ್ಲಿ ನಿಂತಿರುವವರ ಜೊತೆ ಜಗಳವಾಡಿ. ಜಗಳಾಡಲು, ಮೂರೂ ಮುಕ್ಕಾಲರ ’ಮಟಮಟ’ ಮುಂಜಾನೆ ಅಲ್ಲಿ ಯಾರಿರುತ್ತಾರೆ? ಪಾಯಖಾನೆಯ ಬಳಿ ಮಲಗಿರುತ್ತಿದ್ದ ಮೋತಿ ಕೂಡ ಹೋದ ಸಾಯಿಬಾಬಾ ದಿಂಡಿಯ ದಿನ ಸತ್ತು ಹೋಯ್ತು. ಆವತ್ತಿನಿಂದ ಪಾರಂಗೆ ಕಾಕಾನ, ಮುಂಜಾವಿನ ಗುಣು ಗುಣು ಭಜನೆಯನ್ನು ಕೇಳುವವರೆ ಇಲ್ಲ. ಪಾರಂಗೆ ಕಾಕಾನ ಬಳಿ ಮರಾಠಿ ಭಜನೆಗಳ ಭಾಂಡಾರವೇ ಇದೆ. "ಆಜ ಆನಂದೀ ಆನಂದ ಝಾಲಾ..", "ವಿಠೂ ಮಾವುಲೀ ತೂ ಮಾವುಲೀ ಜಗಾಚೀ..", " ಬಾಬಾಂಚಾ ಝಾಲಾ ಪ್ರಸಾದ...", ಹೀಗೆ ಒಂದೇ, ಎರಡೇ?. ಪಾರಂಗೆ ಕಾಕಾ ಹಾಡಲು ಕುಳಿತರೆಂದರೆ, ಚಾಲಿಗೆ ಚಾಳೇ ಕಿವಿಯಾಗುತ್ತದೆ. ನಿನ್ನೆ ಸಂಜೆ ತಂದ ಕ್ಯಾಸೆಟ್ ನ ಹೊಸ ಹಾಡೊಂದನ್ನು ಗುಣಗುಣಿಸುತ್ತ, ಕಾಕಾ ಪಾಯಖಾನೆಯ ಬಳಿ ಹೆಜ್ಜೆ ಹಾಕುತ್ತಿದ್ದರೆ, ಅದಕ್ಕೆ ತಾಳ ಹಾಕುವಂತೆ, ಫನ್ಸೆಕರ್ ಮಾವಶಿಯ ಭಯಾನಕ ಕೆಮ್ಮು. "ಈ ಮುದುಕಿ ರಾತ್ರಿ ಇಡೀ ಕೆಮ್ಮುತ್ತೆ. ಹ್ಯಾಗಾದ್ರೂ ಸಹಿಸ್ತಾರೊ ಆ ಜನ? ರಾತ್ರಿ ಅವಕ್ಕೆ ನಿದ್ದೆಯಾದ್ರೂ ಬರುತ್ತೋ? ಒಂದೇ ಒಂದ್ಸಲ ಸತ್ತಾದ್ರೂ ಹೋಗ್ಬಾರದೆ ಈ ಗೊಡ್ಡು" ಎಂದು ಒಂದು ಕ್ಷಣ ಅಂದುಕೊಳ್ಳುತ್ತಾರೆ ಪಾರಂಗೆ ಕಾಕಾ. ಆದರೆ ವಿನಾಯಕನಿಗೆ ಆಕ್ಸಿಡೆಂಟ್ ಆದಾಗ, ದಿನ ರಾತ್ರಿ ಅನ್ನದೇ ಅವನನ್ನು ನೋಡಿಕೊಂಡದ್ದು ಅದೇ ಮುದುಕಿಯಲ್ಲವೇ ಎಂಬುದು ನೆನಪಾಗಿ ತಮ್ಮ ಯೋಚನೆಗೆ ತಾವೇ ಪಶ್ಚಾತ್ತಾಪ ಪಡುತ್ತ, ತಮ್ಮ ಭಜನೆಯನ್ನು ಮುಂದುವರಿಸುತ್ತ, ನಿರ್ಭೀತರಾಗಿ ಪಾಯಖಾನೆಯೊಳಗೆ ನುಗ್ಗುತ್ತಾರೆ.
- Read more about ಮುಂಬಯಿ ಮುಖಗಳು ಭಾಗ ೧.....
- 17 comments
- Log in or register to post comments