ಮುಕ್ತಿಪಥ

ಮುಕ್ತಿಪಥ

ಚಿತ್ರ

     ಮುಕ್ತಿಪಥ 
     ಆದಿಗುರು ಶ್ರೀ ಶಂಕರಾಚಾರ್ಯ ವಿರಚಿತ 'ಸಾಧನಾಪಂಚಕಮ್' ಒಬ್ಬ ಸಾಧಕ ಅನುಸರಿಸಬೇಕಾದ ರೀತಿ-ನೀತಿಗಳನ್ನು ತಿಳಿಸುವ ಅಪೂರ್ವ ರಚನೆ. ಪರಮ ಸತ್ಯದ ದರ್ಶನ ಮಾಡಿಸುವ ಶ್ರೇಯಸ್ಕರ, ಸನ್ಮಾರ್ಗದ ಪಥವನ್ನು ತೋರಿಸುವ ಈ ಪಂಚಕದಲ್ಲಿ ಒಂದೊಂದರಲ್ಲಿ 8 ಸೂತ್ರಗಳಂತೆ ಒಟ್ಟು  40 ಸೂತ್ರಗಳನ್ನು ಅಳವಡಿಸಲಾಗಿದೆ. ಇದರ ಕನ್ನಡ ಭಾವಾನುವಾದವನ್ನು ಮೂಢನ ಮುಕ್ತಕಗಳ ರೂಪದಲ್ಲಿ ಸಹೃದಯರ ಮಂದಿಟ್ಟಿರುವೆ. ಮೂಲ ಕೃತಿಯನ್ನೂ ಇಲ್ಲಿ ಅವಗಾಹನೆಗೆ ಮಂಡಿಸಿದೆ.  

     ಮುಕ್ತಿಪಥ 
(ಆದಿಗುರು ಶ್ರೀ  ಶಂಕರಾಚಾರ್ಯರ ಸಾಧನಾ ಪಂಚಕದ 
ಕನ್ನಡ ಭಾವಾನುವಾದ - ಮೂಢನ ಮುಕ್ತಕಗಳ ರೂಪದಲ್ಲಿ)
ನಿತ್ಯ ವೇದಾಧ್ಯಯನ ಮಾಡುವವನಾಗಿ
ವೇದೋಕ್ತ ಕರ್ಮಗಳ ಪಾಲಿಸುವನಾಗಿ |
ಈಶಾರಾಧನೆಯಾಗೆ ಕರ್ಮಗಳು ಸಕಲ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧ || 

ಹಾದಿ ತಪ್ಪಿಸುವ ಕರ್ಮಗಳ ತ್ಯಜಿಸಿ
ಅಂತರಂಗದ ಕೊಳೆಯ ತೊಳೆದುಹಾಕಿ |
ಹೊರಸುಖದ ದೋಷವನು ಗುರುತಿಸುವನಾಗೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೨ ||

ನಿನ್ನ ನಿಜರೂಪವನು ತಿಳಿಯಲೆಣಿಸಿರಲು
ಮೋಹ ಸಂಕಲೆಯ ಕಳೆಯಹೊರಟಿರಲು |
ಜ್ಞಾನಿಗಳ ಸಂಗದಲಿ ನಿಜವನರಿಯುತಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೩ ||

ಪರಮಾತ್ಮನಲಿ ಭಕ್ತಿ ಧೃಢವಾಗಿ ತಾನಿರಲು
ಶಾಂತಿ ಮತ್ತಿತರ ಗುಣಗಳನೆ ಪಡೆದಿರಲು |
ಸ್ವಾರ್ಥಪರ ಕರ್ಮದಲಿ ಆಸಕ್ತಿ ತ್ಯಜಿಸಿದೊಡೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೪ ||

ಸದ್ವಿದ್ಯದಾತರಲಿ ಆಶ್ರಯವ ಪಡೆದಿರಲು
ಸದ್ಗುರು ಪಾದಸೇವೆಯನು ನಿತ್ಯ ಗೈದಿರಲು |
ತಿಳಿಯಲುಜ್ಜುಗಿಸೆ ಓಂಕಾರದರ್ಥವನು 
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೫ ||

ಉಪನಿಷದ್ವಾಕ್ಯಗಳು ಸುಮನನವಾಗಿರಲು
ವಾಕ್ಯಾಂತರಾರ್ಥದ ಜಿಜ್ಞಾಸೆ ಮಾಡುತಲಿ |
ಉನಿಷದ್ವಾಕ್ಯವದೆ ನಿಜಜ್ಞಾನವೆನಿಸಿರಲು
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೬ || 

ವಿತಂಡವಾದದೊಡೆ ಇರಿಸಿ ಅಂತರವ
ಉಪನಿಷತ್ತಿನ ಪಥವೆ ನಿನ್ನ ಪಥವೆನಿಸಿರಲು |
ಬ್ರಹ್ಮಾನುಭವದಲ್ಲಿ ಒಂದಾಗಿ ಸಾಗುತಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೭ ||

ಗರ್ವದಲಿ ಮೆರೆಯದಿರು ಎಂದೆಂದಿಗು
ಶರೀರವಿದು ನೀನಲ್ಲ ನೆನಪಿಟ್ಟಿರು |
ತಿಳಿದವರ ಕೂಡೆ ವಾದವನು ಮಾಡದಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೮ ||

ಹಸಿವು ರೋಗಗಳ ಪರಿಹರಿಸಿಕೊಳಬೇಕು
ದಿನನಿತ್ಯದಾಹಾರ ಔಷಧಿಯೊಲಿರಬೇಕು |
ರುಚಿಯಾದ ಭೋಜನವ ಬಯಸದಿರಲಾಗಿ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೯ || 

ತಾನಾಗಿ ಬಂದುದೇ ಪರಮಾನ್ನವೆನಬೇಕು
ಶೀತೋಷ್ಣ ಆದಿಗಳ ಸಹಿಸಿಕೊಳಬೇಕು |
ಅನುಚಿತ ಮಾತುಗಳನಾಡದಿರೆ ಮನುಜ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೦ || 

ನಿರ್ಲಿಪ್ತಭಾವವನು ಹೊಂದಿದವನಾಗಿ
ನಿಂದಾಪನಿಂದೆಗಳ ಗಣಿಸದಿರಬೇಕು |   
ಏಕಾಂತದಲಿ ಸುಖವನರಸುತಿರಲಾಗಿ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೧ ||

ಪರಮಾತ್ಮನಲಿ ಚಿತ್ತ ಲೀನವಿರಿಸಲುಬೇಕು
ಎಲ್ಲೆಲ್ಲು ಅವನನ್ನೆ ಕಾಣುತಿರಬೇಕು |
ಜಗವಿದು ಮನಸಿನಾಟವೆಂದೆಣಿಸುತಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೨ ||

ಪೂರ್ವಕರ್ಮಗಳ ಫಲವನನುಭವಿಸಬೇಕು
ಒದಗುವ ಫಲದಿಂದ ಹೆದರದಿರಬೇಕು |
ಕರ್ಮಫಲವನನುಭವಿಸಿ ಕಳೆದಿರಲು
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೩ || 

ಬ್ರಹ್ಮಾನುಭವದಲ್ಲಿ ಅಚಲನಾಗಿರುತಿರಲು
ಪರಮಾನಂದವದು ಸನಿಹದಲಿರದೇನು |
ಆದಿಗುರು ಶಂಕರರು ತೋರಿರುವ ಮಾರ್ಗ
ಮನುಜಕುಲಕಿದು ಉತ್ತಮವು ಮೂಢ || ೧೪ ||
-ಕ.ವೆಂ.ನಾಗರಾಜ್.
***************
'ಸಾಧನಾ ಪಂಚಕಮ್'
ವೇದೋ ನಿತ್ಯಮಧೀಯತಾಂ ತದುದಿತಂ ಕರ್ಮ ಸ್ವನುಷ್ಠೀಯತಾಂ
ತೇನೇಶಸ್ಯ ವಿಧೀಯತಾಂ ಅಪಚಿತಿಃ ಕಾಮ್ಯೇ ಮತಿಸ್ತ್ಯಜತಾಮ್ |
ಪಾಪೌಘಃ ಪರುಧೂಯತಾಂ ಭವಸುಖೇ ದೋಷೋsನುಸಂಧೀಯತಾಂ
ಆತ್ಮೇಚ್ಛಾ ವ್ಯವಸೀಯತಾಂ ನಿಜಗೃಹಾತ್ ತೂರ್ಣಂ ವಿನಿರ್ಗಮ್ಯತಾಮ್ || ೧ ||

ಸಂಗಃಸತ್ಸು ವಿಧೀಯತಾಂ ಭಗವತೋ ಭಕ್ತಿರ್ದೃಢಾsಧೀಯತಾಂ 
ಶಾಂತ್ಯಾದಿಃ ಪರಿಚೀಯತಾಂ ದೃಢತರಂ ಕರ್ಮಾಶು ಸನ್ತ್ಯಜ್ಯತಾಮ್ |
ಅದ್ವಿದ್ವಾಬುಪಸೃಪ್ಯತಾಂ ಪ್ರತಿದಿನಂ ತತ್ಪಾದುಕಾ ಸೇವ್ಯತಾಂ
ಬ್ರಹ್ಮೈಕಾಕ್ಷರಮರ್ಥ್ಯತಾಂ ಶ್ರುತಿಶಿರೋವಾಕ್ಯಂ ಸಮಾಕರ್ಣ್ಯತಾಮ್ || ೨ ||

ವಾಕ್ಯಾರ್ಥಶ್ಚ ವಿಚಾರ್ಯತಾಂ ಶ್ರುತಿಶಿರಃ ಪಕ್ಷಃ ಸಮಾಶ್ರೀಯತಾಂ
ದುಸ್ತರ್ಕಾತ್ ಸುವಿರಮ್ಯತಾಂ ಶ್ರುತಿಮತಸ್ತರ್ಕೋsನುಸಂಧೀಯತಾಮ್ |
ಬ್ರಹ್ಮಾಸ್ಮೀತಿ ವಿಭಾವ್ಯತಾಂ ಅಹರಹರ್ಗರ್ವಃ ಪರಿತ್ಯಜ್ಯತಾಂ
ದೇಹೇsಹಂ ಮತಿರುಝ್ಯುತಾಂ ಬುಧಜನೈರ್ವಾದಃ ಪರಿತ್ಯಜ್ಯತಾಮ್ || ೩ ||

ಕ್ಷುದ್ ವ್ಯಾಧಿಶ್ಚ ಚಿಕಿತ್ಸ್ಯತಾಂ ಪ್ರತಿದಿನಂ ಭಿಕ್ಷೌಷಧಂ ಭುಜ್ಯತಾಂ
ಸ್ವಾದ್ಯನ್ನಂ ನ ತು ಯಾಚ್ಯತಾಂ ವಿಧಿವಶಾತ್ ಪ್ರಾಪ್ತೇನ ಸಂತುಷ್ಟತಾಮ್ |
ಶೀತೋಷ್ಣಾದಿ ವಿಷಹ್ಯತಾಂ ನ ತು ವೃಥಾ ವಾಕ್ಯಂ ಸಮುಚ್ಚಾರ್ಯತಾಂ
ಔದಾಸೀನ್ಯಮಭೀಷ್ಟತಾಂ ಜನಕೃಪಾನೈಷ್ಠುರ್ಯಮುತ್ ಸೃಜ್ಯತಾಮ್ || ೪ ||

ಏಕಾಂತೇ ಸುಖಮಾಸ್ಯತಾಂ ಪರತರೇ ಚೇತಃ ಸಮಾಧೀಯತಾಂ
ಪೂರ್ಣಾತ್ಮಾ ಸುಸಮೀಕ್ಷತಾಂ ಜಗದಿದಂ ತದ್ಭಾದಿತಂ ದೃಶ್ಯತಾಮ್ |
ಪ್ರಾಕ್ಕರ್ಮ ಪ್ರವಿಲಾಪ್ಯತಾಂ ಚಿತಿಬಲಾನ್ನಾಪ್ಯುತ್ತರೈಃ ಶ್ಲಿಷ್ಯತಾಂ
ಪ್ರಾರಬ್ಧಂ ತ್ವಿಹ ಭುಜ್ಯತಾಂ ಅಥ ಪರಬ್ರಹ್ಮಾತ್ಮನಾ ಸ್ಥೀಯತಾಮ್ || ೫ ||
 
 

Rating
No votes yet