ಹೆಗ್ಗಳಿಕೆಗೆ ಕಳಂಕ ಯತ್ನ : ಲಂಚಾವತಾರಿಗಳ ಆಕ್ರೋಶ

ಹೆಗ್ಗಳಿಕೆಗೆ ಕಳಂಕ ಯತ್ನ : ಲಂಚಾವತಾರಿಗಳ ಆಕ್ರೋಶ

ಬೊಗಳೂರು, ಜ.29- ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದು ಎಂಬ ಹೆಗ್ಗಳಿಕೆಯನ್ನು ನಿವಾರಿಸಲು ಹುಟ್ಟಿಕೊಂಡಿರುವ ಸಂಘಟನೆ ವಿರುದ್ಧ ರಾಜ್ಯಾದ್ಯಂತ ಅಧಿಕಾರಿ ವರ್ಗವು ಸಿಡಿದೆದ್ದಿರುವುದಾಗಿ ವರದಿಯಾಗಿದೆ.

ದೇಶಾದ್ಯಂತ ಭ್ರಷ್ಟಾಚಾರವನ್ನು ಬೆಳೆಸಲು ಮತ್ತು ಅದನ್ನು ಸಂರಕ್ಷಿಸಲು ಏನೇನೆಲ್ಲಾ ಕಸರತ್ತು ಮಾಡುತ್ತಿರುವಾಗ ಈ ಪುಟಗೋಸಿ ಸಂಘಟನೆಗಳೆಲ್ಲಾ ತಲೆ ಎತ್ತಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಮತ್ತು ನೊಂದು ಬೆಂದ ಬಡ ಪ್ರಾಣಿಗಳಿಗೆ ನೆರವಾಗುವುದು ಯಾವ ನ್ಯಾಯ ಎಂದು ಅಖಿಲ ಭಾರತ ಭ್ರಷ್ಟಾಚಾರ ನಿಷೇಧ ವಿರೋಧಿ ಸಂಘಟನೆ ಕೂಗಾಡಿದೆ.

ಒಂದು ಕಡೆಯಿಂದ ಲೋಕಾಯುಕ್ತರನ್ನು ಛೂಬಿಟ್ಟು ನಮಗೆ ನೆಲೆ ಇಲ್ಲದಂತೆ ಮಾಡುವ ಯತ್ನಗಳು ನಡೆಯುತ್ತಿವೆ. ಮತ್ತೊಂದು ಕಡೆಯಿಂದ ಭ್ರಷ್ಟಾಚಾರದ ಕುರಿತು ಜನರ ತಲೆಯಲ್ಲಿ ಇಲ್ಲ ಸಲ್ಲದ ವಿಷಯ ತುಂಬಲಾಗುತ್ತಿದೆ. ಇದಕ್ಕೆ 'ಜನಜಾಗೃತಿ' ಎಂಬ ಪೊಳ್ಳು ಹೆಸರು ನೀಡಲಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ನಾವು ಬದುಕುವುದಾದರೂ ಹೇಗೆ ಎಂದು ಈ ಅಧಿಕಾರಿವರ್ಗ ಪ್ರಶ್ನಿಸಿದೆ.

ಭ್ರಷ್ಟಾಚಾರಿ ಎಂಬ ಪೊಲೀಸರಿಂದ, ತನಿಖಾ ಮಂಡಳಿಗಳಿಂದ, ಲೋಕಾಯುಕ್ತರಿಂದ ತುಳಿತಕ್ಕೊಳಗಾದ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ನಾವು ಶ್ರಮ ವಹಿಸುತ್ತಿರುವಾಗ ಇಂಥ ವೇದಿಕೆಗಳು ತಲೆ ಎತ್ತಿ ನಾವು ತಲೆ ಎತ್ತದಂತೆ ಮಾಡುತ್ತಿವೆ ಎಂದು ಮುಖ್ಯಮಂತ್ರಿಗೆ ದೂರು ಸಲ್ಲಿಸಲು ನಿರ್ಧರಿಸಿರುವ ಸಂಘಟನೆ ಪದಾಧಿಕಾರಿ ಭ್ರಷ್ಟ ಕುಮಾರ್, ದೇಶಾದ್ಯಂತ ಲಂಚ ಆಂದೋಲನ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ.

Rating
No votes yet