ಅಂಚೆ ಪುರಾಣ -4

ಅಂಚೆ ಪುರಾಣ -4

ಬರಹ

ಅಂಚೆ ಪುರಾಣ -4


ಬಂದಳೋ ಬಂದಳು ಚೆಲುವೆ ಬಂದಳು!


     ಅಂಚೆ ಕಛೇರಿಯ ಏಕತಾನತೆಯ ಕೆಲಸಕಾರ್ಯಗಳಲ್ಲಿ ತೊಡಗಿದ್ದವರು ಪರಸ್ಪರ ಮಾತುಕಥೆಗಳಲ್ಲಿ ಕಷ್ಟ-ಸುಖಗಳನ್ನು ಹಂಚಿಕೊಳ್ಳುತ್ತಿದ್ದರು. ವೃತ್ತಿ ವೈಷಮ್ಯ, ಅಸೂಯೆ, ಇತ್ಯಾದಿಗಳು ರಾಜ್ಯ ಸರ್ಕಾರದ ಕಛೇರಿಗಳಿಗೆ ಹೋಲಿಸಿದರೆ ಅಂಚೆ ಕಛೇರಿಯಲ್ಲಿ ಕಡಿಮೆಯಿತ್ತೆಂದೇ ಹೇಳಬಹುದು. ಆಗಾಗ ರಸಮಯ ಸನ್ನಿವೇಶಗಳೂ ಬರುತ್ತಿದ್ದವು. ಅಂಚೆ ಕಛೇರಿಯ ಪ್ರಾರಂಭದಲ್ಲೇ ತಂತಿ ಕಛೇರಿ ಇತ್ತು. ಅದರ ಪಕ್ಕದಲ್ಲೇ ನಾನು ಕೆಲಸ ಮಾಡುತ್ತಿದ್ದ ಉಳಿತಾಯ ಶಾಖೆ. ಆಗ ತಂತಿ ಸಂದೇಶಗಳನ್ನು ಮೋರ್ಸ್ ಲಿಪಿಯಲ್ಲಿ ಕಳುಹಿಸಲಾಗುತ್ತಿತ್ತು. ಸಂದೇಶ ಬರುವಾಗ 'ಕಟ್ಟ ಕಡ ಕಟ್ಟ ಕಡ ಕಡ ಕಟ್ಟ" ಇತ್ಯಾದಿ ಶಬ್ದ ಬರುತ್ತಿತ್ತು. ಅದನ್ನು ಡಿಕೋಡ್ ಮಾಡಿ ತಂತಿ ಸಂದೇಶವನ್ನು ನಮೂನೆಯಲ್ಲಿ ಕೈಬರಹದಲ್ಲಿ ಬರೆದು ಅಂಚೆಯ ಆಳಿನ ಮೂಲಕ ಸಂಬಂಧಿಸಿದವರಿಗೆ ತಲುಪಿಸಲಾಗುತ್ತಿತ್ತು. ಟೆಲಿಗ್ರಾಫ್ ಆಪರೇಟರ್ ಇನ್ನೂ ಹುಡುಗನಾಗಿದ್ದು ಕೀಟಲೆ ಸ್ವಭಾವ ಹೋಗಿರಲಿಲ್ಲ. ಅಂಚೆ ಕಛೇರಿಗೆ ಯಾರಾದರೂ ನೋಡಲು ಚೆನ್ನಾಗಿದ್ದ ಹುಡುಗಿ ಯಾವುದಾದರೂ ಕೆಲಸಕ್ಕಾಗಿ ಬಂದಾದ ಅವನು ಟೇಬಲ್ ಮೇಲೆ 'ಕಟ್ಟ-ಕಡ-ಕಟ್ಟ-ಕಟ್ಟ' ಇತ್ಯಾದಿ ಶಬ್ದ ಮಾಡುತ್ತಿದ್ದ. 'Beauty is coming'' ಎಂದು ಅದರ ಅರ್ಥವಂತೆ. ಇದು ಗೊತ್ತಿದ್ದ ಕಛೇರಿಯವರು ತಾವು ಮಾಡುತ್ತಿದ್ದ ಕೆಲಸ ಬಿಟ್ಟು ಬಂದವರನ್ನು ನೋಡುತ್ತಿದ್ದರು. ಇವನು ಕುಟ್ಟುವುದು, ಉಳಿದವರು ತಲೆ ಎತ್ತಿ ಗಮನಿಸುವುದನ್ನು ನೋಡಲು ತಮಾಷೆಯಾಗಿತ್ತು. ಹೀಗೆಯೇ ಒಮ್ಮೆ ಒಬ್ಬರು ಬಂದಾಗ ಅವನು ಯಥಾ ಪ್ರಕಾರ ಕಡಕಟ್ಟಿಸಿ ಸಂದೇಶ ನೀಡಿದ. ಇತರರು ನೋಡ ನೋಡುತ್ತಿದ್ದಂತೆಯೇ ಬಂದಿದ್ದ ಹುಡುಗಿ ಸಹ ಸೀದಾ ಒಳಗೆ ಬಂದು ಟೆಲಿಗ್ರಾಫ್ ಆಪರೇಟರನ ಟೇಬಲ್ ಮೇಲೆ ತಾನೂ ಕಡ ಕಟ್ಟ ಕಟ್ಟ  ಕುಟ್ಟಿ ಹೆಡ್ ಪೋಸ್ಟ್ ಮಾಸ್ಟರರೊಂದಿಗೆ ಮಾತನಾಡಲು ಹೋದಳು. ನಂತರ ತಿಳಿದ ವಿಷಯವೆಂದರೆ ಆಕೆಯೂ ಟೆಲಿಗ್ರಾಫ್ ಆಪರೇಟರ್ ಆಗಿದ್ದು ಹೆಡ್ ಪೋಸ್ಟ್ ಮಾಸ್ಟರರ ಸಂಬಂಧಿಯಾಗಿದ್ದು ಮಾತನಾಡಿಸಿಕೊಂಡು ಹೋಗಲು ಬಂದಿದ್ದಳಂತೆ. ಅವಳು ನೀಡಿದ್ದ ಸಂದೇಶ 'Thanks for the compliments' ಎಂದು ಆಗಿತ್ತಂತೆ. ಹೆಡ್ ಪೋಸ್ಟ್ ಮಾಸ್ಟರರೊಂದಿಗೆ ಆಕೆ ಈ ಸಂದೇಶ ವಿನಿಮಯಗಳ  ವಿಷಯದಲ್ಲಿ ಯಾವುದೇ ಮಾತನ್ನಾಡಿರಲಿಲ್ಲ. ಆದರೂ ಅಂದಿನಿಂದ ಆಪರೇಟರ್ ಮಿತ್ರನ ಕಡಕಟ್ಟುವಿಕೆ ಸಂದೇಶ ನಿಂತುಹೋಯಿತು.


ಅಂಚೆ ಸೇವೆಗೆ ವಿದಾಯ


     ಅಂಚೆ ಕಛೇರಿಯಲ್ಲಿ ಕೇವಲ ಒಂದು ವರ್ಷ ಸೇವೆ ಸಲ್ಲಿಸಿ ನಂತರ ಕೆ.ಪಿ.ಎಸ್.ಸಿ.ಯಿಂದ ಆಯ್ಕೆಗೊಂಡಿದ್ದ ಕಂದಾಯ ಇಲಾಖೆಯ ಕೆಲಸಕ್ಕೆ ಸೇರಿದೆ. ಅಂಚೆ ಕಛೇರಿಯ ನೌಕರರೆಲ್ಲರೂ 'ಮೊದಲು ಅಂಚೆ ಕಛೇರಿ ಬಿಟ್ಟು ಹೋಗು. ಇಲ್ಲಿ ಕತ್ತೆ ಕೆಲಸ, ಸಂಬಳ ಕಡಿಮೆ. ಅಲ್ಲಿ ನಿನಗೆ ಮುಂದುವರೆಯಲು ಅವಕಾಶಗಳಿವೆ' ಎಂದು ಹೇಳುತ್ತಿದ್ದರು. ನನಗೆ ಗೊತ್ತಿದ್ದ ರಾಜ್ಯ ಸರ್ಕಾರಿ ನೌಕರರೆಲ್ಲಾ ಕೇಂದ್ರ ಸರ್ಕಾರದ ನೌಕರಿ ಬಿಟ್ಟುಬರಬೇಡವೆಂದು ಹೇಳುತ್ತಿದ್ದು ನನಗೆ ಏನು ಮಾಡಬೇಕೆಂದು ತೋಚದೆ ಜ್ವರ ಬಂದಿತ್ತು. 'ಪೋಸ್ಟ್ ಮಾಸ್ಟರಿಗೆ ಬುದ್ಧಿ ಇಲ್ಲ; ಸ್ಟೇಶನ್ ಮಾಸ್ಟರಿಗೆ ನಿದ್ದೆ ಇಲ್ಲ' ಎಂಬ ಗಾದೆ ಮಾತು ಆಗ ಚಾಲ್ತಿಯಲ್ಲಿತ್ತು. ಅಂಚೆ ಕಛೇರಿಯ ಇಲಾಖಾ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ನನ್ನ ಕೆಲಸ ಖಾಯಂ ಆಯಿತೆಂದು ಸಂದೇಶ ಬಂದ ದಿನವೇ ಅಂಚೆ ಕಛೇರಿ ಕೆಲಸಕ್ಕೆ ರಾಜಿನಾಮೆ ನೀಡಿ ಹೊರಬಂದೆ. ಈ ನನ್ನ ನಿರ್ಧಾರಕ್ಕೆ ಪದವೀಧರ ನೌಕರರಿಗೂ ಇತರ ನೌಕರರಿಗೂ ಅಲ್ಲಿ ವ್ಯತ್ಯಾಸವಿರದಿದ್ದುದು ಒಂದು ಕಾರಣವಾಗಿದ್ದರೆ, ಇನ್ನೊಂದು ಕಾರಣ ಹೊರಜಗತ್ತಿಗೆಲ್ಲಾ ಸಂಪರ್ಕ ಕಲ್ಪಿಸುವ ಅಂಚೆ ಕಛೇರಿ ನೌಕರರಿಗೇ ಹೊರಜಗತ್ತಿನ ಸಂಪರ್ಕ ಕಡಿಮೆಯಿತ್ತು. ಅವರು ತಾವಾಯಿತು, ತಮ್ಮ ಕೆಲಸವಾಯಿತು ಎಂಬಂತೆ ಇರಬೇಕಿತ್ತು  ಆ ಸಮಯದಲ್ಲಿದ್ದ ಹಿರಿಯ ನೌಕರರ ಸ್ಥಿತಿ ಸಹ ನನ್ನನ್ನು ಹೊರಬರಲು ಪ್ರೇರಿಸಿತ್ತು. ಒಬ್ಬರು ಹಿರಿಯ ನೌಕರರಂತೂ ರಸ್ತೆಯಲ್ಲಿ ಓಡಾಡುವಾಗ ತಮ್ಮಷ್ಟಕ್ಕೆ ತಾವೇ ಕೈಯಾಡಿಸಿಕೊಂಡು ಒಬ್ಬರೇ ಮಾತನಾಡಿಕೊಂಡು ಹೋಗುತ್ತಿದ್ದರು. ಯಾರಾದರೂ ಮಾತನಾಡಿಸಿದರೆ ಬೆಚ್ಚಿಬಿದ್ದು ವಾಸ್ತವ ಸ್ಥಿತಿಗೆ ಬರುತ್ತಿದ್ದುದನ್ನು ಕಂಡಿದ್ದ ನನಗೆ ಅವರ ಬಗ್ಗೆ ಮರುಕ ಭಾವನೆ ಬರುತ್ತಿತ್ತು. ಅವರು ನನ್ನನ್ನು ಆತ್ಮೀಯರಂತೆ ಮಾತನಾಡಿಸುತ್ತಿದ್ದುದನ್ನು ನಾನು ಮರೆಯುವುದಿಲ್ಲ. ಅಂಚೆ ಇಲಾಖೆ ಬಿಟ್ಟು ಹೊರಬಂದರೂ ನನಗೆ ಅಲ್ಲಿನ ವಾತಾವರಣ, ಸ್ನೇಹಿತರು ನೆನಪಾಗುತ್ತಿರುತ್ತದೆ. ದಶಕಗಳು ಕಳೆದರೂ ಅಂದಿನ ಸ್ನೇಹಿತರು ಈಗಲೂ ಸ್ನೇಹಿತರಾಗಿ ಉಳಿದಿರುವುದು ಅಂಚೆ ಇಲಾಖೆಯನ್ನು ಗೌರವಿಸುವಂತೆ ಮಾಡಿದೆ. ಅಂಚೆ ಕಛೇರಿಯ ವಾತಾವರಣ ನಾನು ಕೆಲಸ ಮಾಡುತ್ತಿದ್ದ ಅವಧಿಯಲ್ಲಿದ್ದಂತೆ ಈಗಿರಲಾರದು. ನಾನು ಪಡೆದಿದ್ದ ಅಂಚೆ ತರಬೇತಿ ಒಂದು ಅತ್ಯತ್ತಮ ತರಬೇತಿಯಾಗಿದ್ದು ನನ್ನ ಮೇಲೆ ಸತ್ಪ್ರಭಾವ ಬೀರಿದೆ.


(ಕಾಲಘಟ್ಟ; 1972-73)


[ಅಂಚೆ ಪುರಾಣ ಇಲ್ಲಿಗೆ ಮುಗಿಸುತ್ತಿದ್ದು ಇನ್ನು ಮುಂದೆ ನನ್ನ ನೆನಪುಗಳ ಹಂಚಿಕೆ ಸೇವಾಪುರಾಣದ ಮೂಲಕ ಮುಂದುವರೆಯಲಿದೆ.)