ಪ್ರಳಯವಂತೆ.. ಇದೇ ೨೧ ಕ್ಕಂತೆ..ಸಂಜೆ ಆರು ಘಂಟೆಗಂತೆ.. ನಿಜ್ವಾಗ್ಲೂ ಅಂತೆ.
ಪ್ರಳಯದ ಬಗ್ಗೆ ಆಗಾಗ ನಾವು ಓದುತ್ತಲೇ ಇರುತ್ತೇವೆ, ಓದಿ ಗಾಭರಿಯಾಗಿ ಸಿಕ್ಕ ಸಿಕ್ಕವರನ್ನು ವಿಚಾರಿಸುತ್ತೇವೆ. ವರ್ಷಗಳ ಹಿಂದೆ ದಕ್ಷಿಣ ಕನ್ನಡ ಮೂಲದ ಖ್ಯಾತ ವಾರಪತ್ರಿಕೆ ಪ್ರಳಯದ ಬಗ್ಗೆ ಒಂದು ಲೇಖನ ಹಾಕಿ ಅದು ಎಷ್ಟು ಜನಪ್ರಿಯ ಆಯಿತು ಎಂದರೆ ಆ ಲೇಖನದ ಪುಸ್ತಿಕೆ ಸಹ ಮಾರಾಟಕ್ಕೆ ಬಂದು ಲಕ್ಷ ಗಟ್ಟಲೆ ಜನ ಕೊಂಡು ಓದಿದರು. ಇಂಥ ಜನರಲ್ಲಿ, ಗಾಭರಿ, ಭಯ, ಹುಟ್ಟಿಸಿ ಹಣ ಮಾಡಿಕೊಳ್ಳುವ ದಂಧೆ ಬಹಳ ಹಳತು. ಈಗ ಅಮೆರಿಕೆಯ ಕ್ಯಾಲಿಫೋರ್ನಿಯಾದ ಧರ್ಮ ಬೋಧಕ ಹೆರಾಲ್ಡ್ ಕ್ಯಾಂಪಿಂಗ್ ಗುಲ್ಲೆಬ್ಬಿಸಿದ್ದಾನೆ ಇದೇ ತಿಂಗಳು ೨೧ ಕ್ಕೆ ಅದೂ ಆರು ಘಂಟೆಗೆ ಸರಿಯಾಗಿ ಪ್ರಳಯವಾಗಲಿದೆ ಅಂತ. ಪವಿತ್ರ ಬೈಬಲ್ ಗ್ರಂಥವನ್ನು ಅವನೂ ಅವನ ಮಿತ್ರರೂ decipher ಮಾಡಿದ್ದಾರಂತೆ. 89 ವರ್ಷ ಪ್ರಾಯದ ಈ ವ್ಯಕ್ತಿ ೭೦ ವರ್ಷಗಳ ಅವಿರತ ಬೈಬಲ್ ಅಧ್ಯಯನದಿಂದ ಪ್ರಳಯದ ಬಗ್ಗೆ ಪವಿತ್ರ ಗ್ರಂಥದಲ್ಲಿರುವುದನ್ನು ಜಗತ್ತಿಗೆ ಸಾರುತ್ತಿದ್ದಾನೆ. ಅದರಲ್ಲಿ ಪ್ರಳಯದ ವಿಷಯ ಸಿಕ್ಕಿತಂತೆ. ದೇವ ವಾಣಿ ಇರುವುದು ಮನುಷ್ಯರಿಗೆ ದಾರಿ ದೀಪವಾಗಿ. ಅದರ ಸಂದೇಶ ನೇರವಾದ ಭಾಷೆಯಲ್ಲಿ ಇರಬೇಕು. ಯಾವುದೇ ಒಂದು ಉಪಕರಣ ಕೊಂಡಾಗ ಅದರೊಂದಿಗೆ ಬರುವ catalogue ರೀತಿ. ಅದನ್ನು decipher ಮಾಡೋ ಅವಶ್ಯಕತೆ ಬರಕೂಡದು. ಏಕೆಂದರೆ decipher ಮನುಷ್ಯನಿಂದ ಮನುಷ್ಯನಿಗೆ ಬದಲಾಗುತ್ತಾ ಹೋಗುತ್ತದೆ. ಅದರೊಂದಿಗೆ decipher ಮಾಡಲ್ಪಟ್ಟ ಸಂದೇಶವೂ ಕೂಡಾ. ಅವರವರ ಬುದ್ಧಿ ಮತ್ತೆಗೆ ಅನುಸಾರ decipher ಕೆಲಸ ನಡೆಯುತ್ತದೆ.
ಹಿಂದೂ ಶಾಸ್ತ್ರಗಳಲ್ಲಿ ಪ್ರಳಯದ ಬಗ್ಗೆ ಉಲ್ಲೇಖ ಇರುವುದನ್ನು ಕಾಣಬಹುದು. ಕಲಿಯುಗದ ಅವಸಾನದಲ್ಲಿ ಪ್ರಳಯ ಆಗುವ ಸಾಧ್ಯತೆ ಇದೆ ಎನ್ನುತ್ತಾರೆ. ಅದೇ ರೀತಿ “ಏಕದೇವೋಪಾಸನೆ” ಗೆ ಒತ್ತು ನೀಡುವ ಅಬ್ರಾಹಾಮಿಕ್ ಧರ್ಮಗಳಾದ ಯಹೂದ್ಯ, ಕ್ರೈಸ್ತ ಮತ್ತು ಇಸ್ಲಾಂ ಧರ್ಮಗಳಲ್ಲೂ ಇದರ ಪ್ರಸ್ತಾಪ ಇದೆ. ಇಸ್ಲಾಂ ಧರ್ಮದಲ್ಲಿ ಪ್ರಳಯವನ್ನು “ಯೌಮ್ ಅಲ್ ಕಿಯಾಮ” (ಅಂತ್ಯ ದಿನ) ಎಂದು ಕರೆಯುತ್ತಾರೆ.
ಇಸ್ಲಾಮಿನಲ್ಲಿ ಪ್ರಳಯದ ದಿನದ ಬಗ್ಗೆ ಉಲ್ಲೇಖ ಕೆಲವೊಂದು ದೃಷ್ಟಾಂತ ಗಳೊಂದಿಗೆ ಕೊಡಲಾಗಿದೆ. ಏಕಾ ಏಕಿ ಪ್ರಳಯ ಆರಂಭ ಆಗೋಲ್ಲ. ತಂದೆ ಮಗನನ್ನು ಕೊಲ್ಲುವುದು, ತಾಯಿ ಮಗನ, ತಂದೆ ಮಗಳ ನಡುವಿನ ಲೈಂಗಿಕ ಸಂಬಂಧ, ಅನ್ಯಾಯಗಳು, ಬಡ್ಡಿ, ಮೋಸ, ವಂಚನೆ, ಕೊಲೆ ಸುಲಿಗೆ, ಕುಡಿತ, ದಿನನಿತ್ಯದ ಪ್ರತಿಯೊಬ್ಬರ ಧಂಧೆಯಾಗಿ, ಜೀವನ ರೀತಿಯಾಗಿ ಮಾರ್ಪಟ್ಟು ಇಂಥ ಕೃತ್ಯಗಳಲ್ಲಿ ತೊಡಗಿಸಿ ಕೊಂಡವರು ಇದನ್ನು ಸ್ವಾಭಾವಿಕ ಎಂದು ಪರಿಗಣಿಸಿ ಉಡಾಫೆಯಿಂದ ಬದುಕುವುದು. ಆಳುವವರು ಅತಿ ಕ್ರೂರಿಗಳಾಗಿ ಮಾರ್ಪಡುವುದು. ಬಡವರಿಗೆ ಸಲ್ಲಬೇಕಾದ ಪಾಲನ್ನು ಕೊಡದೆ ಸ್ವತಃ ಸ್ವಾಹಾ ಮಾಡುವುದು. ಹೀಗೆ ಅನ್ಯಾಯ, ಅಕ್ರಮ, ಕ್ರೌರ್ಯಗಳು ಮುಗಿಲು ಮುಟ್ಟಿದಾಗ ಇನ್ನೂ ಗಂಭೀರವಾದ ಕೆಲವು ಘಟನೆಗಳು ಜರುಗುವುದು ಪ್ರಳಯಕ್ಕೆ ಮುನ್ನ.
ಪ್ರಥಮವಾಗಿ ಪವಿತ್ರ ಮಕ್ಕಾ ನಗರದಲ್ಲಿರುವ ಕಪ್ಪು ಚೌಕಾಕಾರದ “ಕಾಬಾ” ಭವನ ವನ್ನು ನಾಶ ಮಾಡ ಲಾಗುವುದು.
ಒಂದು ವಿಚಿತ್ರ, ಭೀಕರ ಜಂತುವಿನ ದರ್ಶನ ವಿಶ್ವಕ್ಕೆ ಆಗುವುದು.
ಭಯಂಕರ ಚಂಡಮಾರುತ ಬೀಸಿ ಬೆಟ್ಟ ಗುಡ್ಡಗಳು, ಪರ್ವತಗಳು ಹತ್ತಿಯ ಉಂಡೆಗಳಾಗಿ ಹಾರುವುವು.
ಅಂತಿಮವಾಗಿ, ಪೂರ್ವ ದಿಕ್ಕಿನಲ್ಲಿ ಹುಟ್ಟುವ ಸೂರ್ಯ ಪಶ್ಚಿಮ ದಿಕ್ಕಿನಲ್ಲಿ ಹುಟ್ಟುವನು. ಈ ಬೆಳವಣಿಗೆಯೊಂದಿಗೆ ಮನುಷ್ಯನ ಎಲ್ಲಾ ಲೆಕ್ಕಾಚಾರಗಳ ಕಡತವನ್ನು ಮುಚ್ಚಲಾಗುವುದು.( end of year accounting ಥರ).
ಮೇಲೆ ಹೇಳಿದ ವರ್ಣನೆ ಇಸ್ಲಾಂ ಗ್ರಂಥ ಗಳಲ್ಲಿರುವ ನೂರಾರು ದೃಷ್ಟಾಂತ ಗಳಿಂದ ಆರಿಸಿದ್ದು.
ಪ್ರಳಯದ ಬಗ್ಗೆ ಕನ್ನಡದ ನ್ಯೂಸ್ ಚಾನಲ್ ನವರು ದುಗುಡ, ಭಯ ಮಿಶ್ರಿತ ಧ್ವನಿಯಲ್ಲಿ ವಿವರಣೆ, ವರ್ಣನೆ ನೀಡುವುದನ್ನು ಕೇಳಿದವರು ಕಂಪಿಸುವುದರಲ್ಲಿ ಅನುಮಾನವಿಲ್ಲ. ಒಂದು ಆಂಗ್ಲ ಚಿತ್ರದ ತುಣುಕೊಂದನ್ನು ತೋರಿಸುತ್ತಾ ಪ್ರಳಯವಂತೆ, ಹಾಗಾಗುತಂತೆ, ಹೀಗಾಗುತ್ತಂತೆ ಎಂದು ಅಂತೆ ಕಂತೆಗಳನ್ನು ಪುಂಖಾನು ಪುಂಖವಾಗಿ ಬಿಡುತ್ತಾ ಜನರಲ್ಲಿ ಗಾಭರಿ ಹುಟ್ಟಿಸುವ ಇವರ ನಡವಳಿಕೆಗೆ ಏನನ್ನಬೇಕೋ? ಈ ವರದಿಗಳನ್ನು ನೋಡಿದ ಜನ ಗಾಭರಿಯಾಗೋ ಬದಲು ಆ ಚಾನಲ್ ಗಳಿಗೆ ಇ –ಮೇಲ್ ಮೂಲಕ ಛೀಮಾರಿ ಹಾಕಿ ಇಂಥ ಬೊಗಳೆ ಗಳನ್ನು ಜನ ಸಹಿಸರು ಎನ್ನುವ ಸಂದೇಶವನ್ನು ಕೊಡಬೇಕು.
Comments
ಉ: ಪ್ರಳಯವಂತೆ.. ಇದೇ ೨೧ ಕ್ಕಂತೆ..ಸಂಜೆ ಆರು ಘಂಟೆಗಂತೆ.. ನಿಜ್ವಾಗ್ಲೂ ...