ನಡೆಯೋಣ

ನಡೆಯೋಣ

 

 
     ಬನ್ನಿ, ನಡೆಯೋಣ. ಓಡದಿರೋಣ, ಹಾರದಿರೋಣ, ಒಟ್ಟಿಗೇ ನಡೆಯೋಣ. ಈ ಬದುಕು ಇರುವುದು ನಡೆಯುವುದಕ್ಕೆ. ಓಡಿದರೆ, ಹಾರಿದರೆ ನಾವು ನೋಡುವುದನ್ನು ನೋಡದೇ ಹೋಗಬಹುದು. ನಡೆಯುತ್ತಾ ಹೋದರೆ ನಾವು ಸುತ್ತಲೂ ನೋಡುತ್ತಾ ಹೋಗಬಹುದು, ಅನುಭವಿಸಬಹುದು, ಆನಂದಿಸಬಹುದು, ಕಲಿಯಬಹುದು, ಕಲಿಸಬಹುದು, ಅಳಬಹುದು, ನಗಬಹುದು, ಒಟ್ಟಿನಲ್ಲಿ ಬದುಕಬಹುದು. 'ಜಗವಿದು ಜಾಣ, ಚೆಲುವಿನ ತಾಣ, ಎಲ್ಲೆಲ್ಲೂ ರಸದೌತಣ' ಎಂಬ ಕವಿವಾಣಿಯನ್ನು ಮೆಲುಕುತ್ತಾ ಮೈಮರೆಯಬಹುದು. ಅತಿ ವೇಗದಲ್ಲಿ ಧಾವಿಸಬೇಕಾಗಿರುವ ಇಂದಿನ ದಿನಗಳಲ್ಲಿ ಇದು ಅವಾಸ್ತವಿಕವಾಗಿ ತೋರಬಹುದು. ಆದರೆ, ಅತಿ ವೇಗದಲ್ಲಿ ನಾವೂ ಓಡಬೇಕಾಗಿರುವ ಇಂದಿನ ಪರಿಸ್ಥಿತಿಯಲ್ಲಿ ನಾವು ಕಳೆದುಕೊಳ್ಳುತ್ತಿರುವುದು ಕಡಿಮೆಯೇನಲ್ಲ. ಈ ಅತಿವೇಗ ನಮ್ಮ ಸಮೀಪದಲ್ಲಿರುವವರನ್ನೂ ಕಾಣದಿರುವಂತೆ ಮಾಡುತ್ತದೆ. ನಾವು ಏನನ್ನು ಪಡೆಯಲು ಓಡುತ್ತಿದ್ದೇವೆಯೋ ಅದು ನಮ್ಮ ಸಮೀಪದಲ್ಲೇ ಇರುವುದನ್ನು ಕಾಣದೇ ಹೋಗುವಂತೆ ಮಾಡುತ್ತದೆ. ಓಡಿ ಓಡಿ ದಣಿದಾಗ ನಿಂತು ನೋಡಿದರೆ ನಾವು ಎಲ್ಲಿಂದ ಓಡಲು ಹೊರಟಿದ್ದೆವೋ ಆ ಜಾಗದಲ್ಲೇ ಇರುವುದನ್ನು ಕಂಡು ಅವಾಕ್ಕಾಗುತ್ತೇವೆ. ಅಷ್ಟಾಗಿದ್ದರೆ ಪರವಾಗಿಲ್ಲ, ಮೊದಲಿದ್ದ ಜಾಗದಿಂದ ಇನ್ನೂ ಹಿಂದಕ್ಕೆ ಹೋಗಿದ್ದರೆ? ಅಷ್ಟೊಂದೆಲ್ಲಾ ಓಡಿದ್ದು ವ್ಯರ್ಥವಾಯಿತಲ್ಲಾ ಎಂದು ಅರ್ಥ ಮಾಡಿಕೊಳ್ಳುವ ಹೊತ್ತಿಗೆ ಕಾಲ ಮಿಂಚಿರುತ್ತದೆ. ನಾವು ನಡೆಯುತ್ತಾ ಹೋದಂತೆ, ಮನುಷ್ಯನ ಅತಿ ಒಳ್ಳೆಯ ಮತ್ತು ಅತಿ ಕೆಟ್ಟ ಸ್ವಭಾವಗಳ - ಕೇವಲ ಬೇರೆಯವರದಲ್ಲ, ನಮ್ಮದೂ ಕೂಡ - ಪರಿಚಯವೂ ಆಗುತ್ತದೆ. ನಡೆಯುತ್ತಿದ್ದರೆ ಈ ಜಗತ್ತಿನ ಅಗಾಧತೆ, ವಿಶಾಲತೆ, ಪ್ರೀತಿಯ ಹರವನ್ನು ಕಣ್ಣಾರೆ ಕಂಡು ಅನುಭವಿಸಬಹುದು. ನಡೆಯುತ್ತಿದ್ದರೆ, ಸೂರ್ಯೋದಯ, ಸೂರ್ಯಾಸ್ತ, ಆಗಸದಲ್ಲಿನ ಚಂದ್ರ, ತಾರೆಗಳು, ನದಿಗಳು, ಸಮುದ್ರ, ಹಾರುವ ಹಕ್ಕಿಗಳನ್ನು ಕಂಡು ಕಣ್ತುಂಬಿಕೊಳ್ಳಬಹುದು. ಅತಿ ವೇಗ ಸಂಬಂಧಗಳನ್ನು ದೂರ ಮಾಡಬಹುದು; ಆದರೆ, ಸಾಮಾನ್ಯ ನಡಿಗೆ ಒಟ್ಟುಗೂಡಿಸಬಹುದು.
     ಅಗತ್ಯವಿರುವಷ್ಟು ಮಾತ್ರ ಹೊಂದುವುದರಲ್ಲಿನ ಸುಖ, ಸಂತೋಷಗಳು, ಬೇಕುಗಳನ್ನು ಹೆಚ್ಚಿಸಿಕೊಳ್ಳುವದರಲ್ಲಿ ಇರುವುದಿಲ್ಲವೆಂದು ಗೊತ್ತಾಗುವುದು ನಡೆಯುವುದರಿಂದ. ಏಕೆಂದರೆ ಕಡಿಮೆ ಭಾರವಿದ್ದಷ್ಟೂ ನಡೆಯುವುದು ಸುಲಭ. ಜೀವನ ಸರಳವಾಗಿದೆ, ಅದನ್ನು ಓಡಿ ಸಂಕೀರ್ಣಗೊಳಿಸಿಕೊಳ್ಳಬೇಕೇಕೆ? ಮೋಡ ಹೆಚ್ಚು ಮಳೆ ಸುರಿಸುವಂತೆ ನಾವು ಮಾಡಲಾರೆವು, ಸೂರ್ಯನ ಬಿಸಿಲಿನ ತಾಪ ಕಡಿಮೆಯಾಗುವಂತೆ ನಾವು ಮಾಡಲಾರೆವು. ಅವು ಪ್ರಕೃತಿಯ ಕೊಡುಗೆಗಳು, ಬೇಕಾದರೆ ತೆಗೆದುಕೊಳ್ಳಬಹುದು, ಬೇಡವಾದರೆ ಬಿಡಬಹುದು! ಅವನ್ನು ಕೊಡುಗೆಗಳು ಎಂದು ಭಾವಿಸಿದರೆ, ಅವು ಗುರಿಯೆಡೆಗಿನ ಸಾಧನಗಳಲ್ಲ, ಅವೇ ಗುರಿ ಮತ್ತು ಸಾಧನಗಳು ಎಂಬುದು ಅರಿವಾಗುತ್ತದೆ. ಇಂತಹ ಕೊಡುಗೆಗಳು ನಮಗೆ ಇಷ್ಟವಾಗಲಿ, ಇಲ್ಲದಿರಲಿ ಅವನ್ನು ಪ್ರೀತಿಸುವ, ಸಮಭಾವದಿಂದ ಸ್ವೀಕರಿಸುವ ಮನೋಭಾವ 'ನಡೆಯುವುದರಿಂದ' ಬರುತ್ತದೆ. ಹಳ್ಳಿಯ ಒಬ್ಬ ದನಗಾಹಿ ದನಗಳನ್ನು ತಂದೆಯ ಪ್ರೀತಿಂದ ಕಾಣುತ್ತಾನೆ, ಒಂದು ಮಗು ಆಗಸದಲ್ಲಿನ ನಕ್ಷತ್ರಗಳನ್ನು ಬಹಳ ಕಾಲ ತನ್ಮಯತೆಂದ ಕಂಡು ಸಂತಸಪಡುತ್ತದೆ. ಅಲ್ಲಿ ಬದುಕು 'ನಡೆಯುತ್ತದೆ', ಧಾವಿಸುವುದಿಲ್ಲ. 
     ನಡೆದಾಗ ದಣಿವಾಗುತ್ತದೆ, ನೀರಡಿಕೆಯಾಗುತ್ತದೆ, ಹಸಿವಾಗುತ್ತದೆ, ಗುರಿ ದೂರವೆನಿಸಿದಾಗ ನಿರಾಶೆಯೂ ಮೂಡುತ್ತದೆ. ಕೆಲವೊಮ್ಮೆ ನೀರೂ ಸಿಗದೆ ಬಸವಳಿಯಬೇಕಾಗುತ್ತದೆ. ಆಗ ನಾವು ಬದುಕಿನ ವಾಸ್ತವತೆಯನ್ನು  ಎದುರಿಸುವ ಶಕ್ತಿಯನ್ನು, ಒಳಗೆ ಹುದುಗಿರುವ ಚೇತನವನ್ನು ಎಬ್ಬಿಸುವ ಕಲೆಯನ್ನು ಕಲಿತುಕೊಳ್ಳುತ್ತೇವೆ. ಕೆಲವೊಮ್ಮೆ ಬೇಕಾಗಿದ್ದಕ್ಕಿಂತ ಹೆಚ್ಚು ಸಿಕ್ಕಾಗ ಹೃದಯ ಕೃತಜ್ಞತೆಯಿಂದ ಭಾರವಾಗುತ್ತದೆ. ಬದುಕನ್ನು ಅದು ಬಂದಂತೆ ಸ್ವೀಕರಿಸುವ ಕಲೆ ನಡೆಯುವವರದಾಗುತ್ತದೆ. ಕಷ್ಟವಾದರೂ, ನಷ್ಟವಾದರೂ ನಡೆಯುವುದನ್ನು ನಿಲ್ಲಿಸಬಾರದೆಂಬುದಕ್ಕೆ ಈ ಒಂದು ಪುಟ್ಟ ಕಥೆ ನಿದರ್ಶನವಾಗುತ್ತದೆ. ಪತಿ-ಪತ್ನಿ ಒಂದು ದೊಡ್ಡ ಬೆಟ್ಟವನ್ನು ಬೇರೆ ಬೇರೆ ದಿಕ್ಕುಗಳಿಂದ ಹತ್ತಲು ತೊಡಗಿರುತ್ತಾರೆ ಎಂದು ಭಾವಿಸೋಣ. ಅರ್ಧ ಬೆಟ್ಟ ಹತ್ತಿದಾಗ ಪತಿಗೆ ಇನ್ನು ಹತ್ತಲು ಸಾಧ್ಯವಿಲ್ಲವೆನ್ನಿಸಿ ಕುಳಿತುಕೊಳ್ಳುತ್ತಾನೆ. ಆಗ ಅಲ್ಲಿಗೆ ಹಾರಿ ಬಂದ ಗುಬ್ಬಚ್ಚಿಯೊಂದು ಉಲಿಯುತ್ತದೆ, "ಏಳು, ನಿಲ್ಲಬೇಡ. ಅಲ್ಲಿ ನಿನ್ನ ಹೆಂಡತಿ ನಿನ್ನನ್ನು ಬೆಟ್ಟದ ತುದಿಯಲ್ಲಿ ಕಾಣಲು ಕಾತರಿಸಿದ್ದಾಳೆ". ಅವನು ಗಡಬಡಿಸಿ ಎದ್ದು ಮುಂದೆ ಏರತೊಡಗುತ್ತಾನೆ. ಅತ್ತ ಕಡೆ ಅವನ ಹೆಂಡತಿ ಸಹ ಅರ್ಧ ದಾರಿಯಲ್ಲೇ ಬಸವಳಿದು ಇನ್ನು ಹತ್ತಲು ಸಾಧ್ಯವೇ ಇಲ್ಲವೆಂಬ ಸ್ಥಿತಿ ತಲುಪಿರುತ್ತಾಳೆ. ಆ ಗುಬ್ಬಚ್ಚಿ ಅವಳ ಬಳಿ ಹೋಗಿ ಅದೇ ಸಂದೇಶ ಕೊಡುತ್ತದೆ. ಪತ್ನಿ ಸಹ ಚೈತನ್ಯ ಒಟ್ಟುಗೂಡಿಸಿಕೊಂಡು ಪುನಃ ಬೆಟ್ಟ ಏರತೊಡಗುತ್ತಾಳೆ. 'ಏಳಿ, ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ' ಎಂಬ ವಿವೇಕವಾಣಿ ನೆನಪಾಗುತ್ತದಲ್ಲವೇ?
     ನಡೆಯುತ್ತಾ ಹೋದಂತೆ, ವಿಶಾಲ ವಿಶ್ವದ ಎದುರು ಅಲ್ಪಚೇತನರಾದ ನಮ್ಮತನದ ಅರಿವಾಗುತ್ತದೆ, ಅಂತರಂಗ ಚುರುಕಾಗುತ್ತಾ ಹೋಗುತ್ತದೆ. ದೇವನ ಕರುಣೆಯನ್ನು ಕಾಣುವ ಸೌಭಾಗ್ಯ ನಮ್ಮದಾಗುತ್ತದೆ. ಅವನ ಪ್ರತಿಫಲಾಪೇಕ್ಷೆಲ್ಲದ ಶುದ್ಧ ಪ್ರೀತಿಯ ಅನುಭವವಾಗುತ್ತದೆ. ಏನನ್ನಾದರೂ ಕೊಡಬೇಕೆಂದರೆ ನಮ್ಮಲ್ಲಿ ಏನಾದರೂ ಇರಬೇಕು. ಎಲ್ಲಾ ವಸ್ತುಗಳಿಗೂ ಬೆಲೆಯಿದೆ. ಆದರೆ, ಕರುಣೆ, ಪ್ರೀತಿ, ವಿಶ್ವಾಸಗಳಿಗೆ ಬೆಲೆ ಕಟ್ಟಲಾಗುವುದಿಲ್ಲ. ಅವನ್ನಾದರೂ ಕೊಡುವ ಮನಸ್ಸು ಬರುವುದು 'ನಡೆಯುವುದರಿಂದಲೇ'! 'ನಡೆಯುವ' ಹಳ್ಳಿಗಳಲ್ಲಿ ಅಪರಿಚಿತರಿಗೂ ಅವು ಸಿಗುತ್ತವೆ. 'ಓಡುವ' ನಗರಗಳಲ್ಲಿ ಪರಿಚಿತರಿಗೂ ಅವು ಅಲಭ್ಯ. ತಮಗೇ ಊಟಕ್ಕೆ ತೊಂದರೆದ್ದರೂ, ಹಳ್ಳಿಗರು ಸಾಲ ತಂದಾದರೂ ಆತಿಥ್ಯ ಮಾಡುತ್ತಾರೆ. ನಗರಿಗರು ಯಾರಾದರೂ ಬರುವ ಸೂಚನೆ ಕಂಡರೆ, ಅವರು ಬಾರದಂತೆ ನೆಪಗಳನ್ನು ಮುಂದೊಡ್ಡುವುದು ವಿಶೇಷವಲ್ಲ. ಇರುವುದನ್ನು ಹಂಚಿಕೊಳ್ಳಬಹುದು, ಇಲ್ಲದಿದ್ದರೆ? ನಮ್ಮಲ್ಲೇ ಪ್ರೀತಿಯ ಕೊರತೆಯಿದ್ದರೆ ಕೊಡುವುದಾದರೂ ಹೇಗೆ? ನಗರದಲ್ಲಿ ಕಸಕ್ಕೂ 'ಬೆಲೆಯಿದೆ. ಬೆಲೆ ತೆರದೇ ಅಲ್ಲಿ ಏನೂ ಸಿಗುವುದಿಲ್ಲ. ಆದರೆ, ಹಳ್ಳಿಯ ಒಬ್ಬ ಬಡ ಹಣ್ಣಿನ ವ್ಯಾಪಾರಿ ಬಳಲಿದ ಅಪರಿಚಿತ ದಾರಿಹೋಕನನ್ನು ಕಂಡರೆ ಕರುಣೆಂದ ಒಂದು ಹಣ್ಣನ್ನು ಕೊಡುವ ಮನಸ್ಸು ಹೊಂದಿರುತ್ತಾನೆ. 
     ಸಾಧು-ಸಂತರು ಹೇಳುತ್ತಾ ಬಂದಿರುವ ಸಂದೇಶವೆಂದರೆ, 'ಇತರರಿಗೆ ಪ್ರತಿಫಲಾಪೇಕ್ಷೆಲ್ಲದ ಪ್ರೀತಿ, ವಿಶ್ವಾಸಗಳನ್ನು ಕೊಡಬಲ್ಲೆವಾದರೆ, 'ನಾನು'ವಿನಿಂದ 'ನಾವು'ಗೆ ಬದಲಾಗುತ್ತೇವೆ ಮತ್ತು ಪರಸ್ಪರ ಹೆಚ್ಚು ಆತ್ಮೀಯರಾಗುತ್ತೇವೆ'. ಸುತ್ತಮುತ್ತಲಿನವರೊಡನೆ ಸೌಹಾರ್ದತೆಂದ ಬಾಳುವುದರ ಸಂತೋಷ ಹೆಚ್ಚಿನದು. ಆ ಸೌಹಾರ್ದತೆ ಹೇಗಿರಬೇಕೆಂದರೆ 'ನಡೆಯುವ' ಕಾಲುಗಳಂತಿರಬೇಕು. ಗಮನಿಸಿದ್ದೀರಾ? ಒಂದು ಕಾಲು ನಡೆಯುತ್ತಿದ್ದರೆ, ಇನ್ನೊಂದು ಕಾಲು ಆ ಸಮಯದಲ್ಲಿ ವಿಶ್ರಾಂತಿ ಪಡೆಯುತ್ತದೆ. ಸಮನ್ವಯದ ತತ್ವ 'ನಡೆಯುವುದರಲ್ಲಿದೆ'. ಒಬ್ಬ ಅರ್ಹ ವ್ಯಕ್ತಿಗೆ ಸಹಾಯ ಮಾಡಿದೆವೆಂದು ಇಟ್ಟುಕೊಳ್ಳೋಣ. ಈಗ ಹೇಳಿ, ಹಾಗೆ ಮಾಡಿ ನಾವು ಸಹಾಯ ಮಾಡಿದೆವೋ, ಮಾಡಿಕೊಂಡೆವೋ? ಇನ್ನೂ ಅರ್ಥವಾಗಬೇಕೆಂದರೆ ಈ ಸಂದರ್ಭ ನೆನಪಿಸಿಕೊಳ್ಳೋಣ. ಒಂದು ಮಗುವಿಗೆ ಅದು ಇಷ್ಟಪಡುವ ಚಾಕೊಲೇಟನ್ನು ಕೊಟ್ಟೆವು ಅಂದುಕೊಳ್ಳೋಣ. ಆ ಮಗುವಿಗೆ ಆಗುವ ಸಂತೋಷ, ಅದರ ಕಣ್ಣಿನ ಹೊಳಪನ್ನು ಕಂಡು ನಮಗೆ ಖುಷಿಯಾಗುವುದೋ ಇಲ್ಲವೋ? ಅದು ನಾವು ಕೊಟ್ಟದ್ದೋ ಪಡೆದದ್ದೋ? 'ಪಡೆಯುವುದಕ್ಕಾಗಿ ಕೊಟ್ಟದ್ದು' ಎಂದರೆ ಹೆಚ್ಚು ಅರ್ಥಪೂರ್ಣವೆನಿಸೀತು. ತುಂಬಿ ತುಳುಕಿರುವ ಬಸ್ಸಿನಲ್ಲಿ ಕಷ್ಟಪಟ್ಟು ನಿಂತಿರುವ ಒಬ್ಬ ವೃದ್ಧರಿಗೆ ಕುಳಿತ ಸೀಟಿನಿಂದ ಎದ್ದು ಅವರಿಗೆ ಕುಳಿತುಕೊಳ್ಳಲು ಅನುಕೂಲ ಮಾಡಿಕೊಡುವುದರಲ್ಲೂ 'ಕೊಟ್ಟು ಪಡೆಯುವ' ಸುಖವಿದೆ, ಏನೋ ಒಳ್ಳೆಯದು ಮಾಡಿದೆವೆಂದು ಮನ ಹಿಗ್ಗುವ/ಸಮಾಧಾನವಾಗುವ ಕ್ರಿಯೆದೆ. ನಡೆಯುವುದು ಎಂದರೆ ಮುಂದೆ ಹೋಗುವುದು. ನಡೆಯುವುದರಿಂದ ಕೇವಲ ಬದುಕಿನಲ್ಲಿ ಮುನ್ನಡೆಯುವುದಿಲ್ಲ, ಬೆಳೆಯುತ್ತಾ ಮುಂದೆ ಹೋಗುತ್ತೇವೆ. 
     ಮನುಷ್ಯನ ಮನಸ್ಸು ಈಗಿರುವ ಸ್ಥಿತಿಗಿಂತ ಮುಂದುವರೆಯಲು ಚಡಪಡಿಸುತ್ತಿರುತ್ತದೆ. ಆಗ ಅಂತರಂಗದ ಅನಿಸಿಕೆಗಳಿಗೆ ಮಹತ್ವ ಕೊಡದೆ, ಬೇರೆಯದೇ ಆದ ಯೋಜನೆಗಳು, ನಡೆಗಳು ರೂಪುಗೊಳ್ಳುತ್ತವೆ. ಅಂದರೆ ನಡೆಯುವ ದಾರಿ ತಪ್ಪುತ್ತದೆ. ಕಾಲ ಸರಿದಂತೆ ಮನಸ್ಸು ಕಲುತಗೊಳ್ಳುತ್ತದೆ, ಮೊದಲು ಹೊಂದಿದ್ದ ನಂಬಿಕೆಗಳು, ಮೌಲ್ಯಗಳು ಸವಕಲಾಗುತ್ತವೆ. ಹಿಂದೆ ಹಿರಿಯರು ಇರುವೆ ಗೂಡುಗಳ ಬಳಿ ಸಕ್ಕರೆ, ಹಿಟ್ಟುಗಳನ್ನು ಉದುರಿಸುತ್ತಿದ್ದುದನ್ನು ಕಂಡಿದ್ದೇನೆ. ಈಗ ಅದೇ ಗೂಡುಗಳಿಗೆ ಇಂದಿನವರು ಡಿ.ಡಿ.ಟಿ./ಗೆಮಾಕ್ಸಿನ್ ಪುಡಿ ಹಾಕುವುದನ್ನೂ ಕಂಡಿರುವೆ. ಆದರೆ, ಸರಿದಾರಿಯಲ್ಲಿ  ನಡೆಯುತ್ತಾ ಹೋದಂತೆ ಜಗತ್ತು ಸ್ಪಷ್ಟವಾಗುತ್ತಾ ಹೋಗುತ್ತದೆ. ನಾನು ಮತ್ತು ನಾವುಗಳ, ಅಂತರಂಗದ ಮತ್ತು ಬಹಿರಂಗದ, ಸ್ವಾರ್ಥದ ಮತ್ತು ಸ್ವಾರ್ಥರಾಹಿತ್ಯದ ವ್ಯತ್ಯಾಸಗಳ ಕುರಿತು ಹೊಂದಿದ್ದ ಮೊದಲಿನ ಅನಿಸಿಕೆಗಳು ಪರಿಷ್ಕೃತಗೊಳ್ಳುತ್ತಾ ಹೋಗುತ್ತದೆ. ನಡೆಯುತ್ತಾ ಹೋದಂತೆ ಹಲವಾರು ಪ್ರಶ್ನೆಗಳು, ಸಮಸ್ಯೆಗಳು ಎದುರಾಗುತ್ತವೆ. ಆ ಪ್ರಶ್ನೆಗಳು, ಸಮಸ್ಯೆಗಳಿಗೆ ನಾವು ಕೊಡುವ ಉತ್ತರಗಳು ನಾವು ಪ್ರಪಂಚವನ್ನು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ, ನಮ್ಮ ಸ್ಥಾನ ಎಲ್ಲಿದೆ ಅನ್ನುವುದನ್ನು ನಿರ್ಧರಿಸುತ್ತವೆ. ಒಂದು ವಿಚಿತ್ರ ಆದರೂ ಸತ್ಯವೆಂದರೆ, ಸರಿಯಾಗಿ ನಡೆಯುವವರು ಓಡುವವರಿಗಿಂತ, ಹಾರುವವರಿಗಿಂತ ಮುಂದೆ ಇರುತ್ತಾರೆ! ಬನ್ನಿ, ನಾವು ಬದಲಾಗೋಣ, ಜಗತ್ತು ತಂತಾನೇ ಬದಲಾದೀತು! ಬದಲಾಗುತ್ತದೋ, ಇಲ್ಲವೋ ನಮ್ಮ ಕಣ್ಣಿಗಂತೂ ಬದಲಾಗುತ್ತದೆ! ನಡೆಯೋಣ, ಒಟ್ಟಿಗೇ ನಡೆಯೋಣ!!
     
 

Comments

Submitted by ಗಣೇಶ Sat, 10/13/2012 - 00:54

http://www.youtube… ಕವಿನಾಗರಾಜರೆ, ತುಳುವಿನಲ್ಲಿ ’ಮರ್ಲ್ ಪಿಜಿನ್’ ಎಂಬ ಇರುವೆಗಳು ಒಟ್ಟೊಟ್ಟಿಗೆ ಗೂಡಿನಿಂದ ಹೊರಬಂದಾಗ ಅದರ ಮೇಲೆ ಸಕ್ಕರೆ ಈಗಲೂ ಹಾಕುತ್ತೇವೆ.ಕೆಲವೇ ಕ್ಷಣದಲಿ ಅವು ಮಾಯ.. >>> ಹಿಂದೆ ಹಿರಿಯರು ಇರುವೆ ಗೂಡುಗಳ ಬಳಿ ಸಕ್ಕರೆ, ಹಿಟ್ಟುಗಳನ್ನು ಉದುರಿಸುತ್ತಿದ್ದುದನ್ನು ಕಂಡಿದ್ದೇನೆ. ಈಗ ಅದೇ ಗೂಡುಗಳಿಗೆ ಇಂದಿನವರು ಡಿ.ಡಿ.ಟಿ./ಗೆಮಾಕ್ಸಿನ್ ಪುಡಿ ಹಾಕುವುದನ್ನೂ ಕಂಡಿರುವೆ. ಹಿಂದಿನವರು ಇರುವೆಗಳನ್ನು ಆಲಸಿ ಮಾಡುತ್ತಿದ್ದರು. ಈಗಿನವರು ಇರುವೆಗಳಲ್ಲಿ ಹೋರಾಟದ ಛಲ ಮೂಡಿಸುವರು. :)
Submitted by lpitnal@gmail.com Sun, 10/14/2012 - 10:12

ಕವಿನಾಗರಾಜ್ ರವರೇ, ಲಕ್ಷ್ಮೀಕಾಂತ ಇಟ್ನಾಳ ರ ವಂದನೆಗಳು. 'ನಡೆಯೋಣ' ಬರಹ ತುಂಬ ಚನ್ನಾಗಿದೆ. ನಡೆಯುವ ಸುಖ, ಪಡೆಯುವ ಲಾಭ ದೃಷ್ಟಾಂತ ಸಹಿತ ವಿವರಣೆ ಮೆರುಗು ನೀಡಿದೆ. ಒಟ್ಟಿಗೆ ನಡೆಯುವ ತಮ್ಮ ಕರೆಗೆ ಓಗೊಟ್ಟು ನಾನೂ ನಿಮ್ಮೊಂದಿಗೆ.............