ಹುಣಸೆ ಮರದ ದೆವ್ವ

ಹುಣಸೆ ಮರದ ದೆವ್ವ

ಪುಸ್ತಕದ ಲೇಖಕ/ಕವಿಯ ಹೆಸರು
ಎನ್. ನರಸಿಂಹಯ್ಯ
ಪ್ರಕಾಶಕರು
ಸಪ್ನ ಬುಕ್ ಹೌಸ್, ಗಾಂಧಿನಗರ, ಬೆಂಗಳೂರು
ಪುಸ್ತಕದ ಬೆಲೆ
ರೂ.೨೭.೦೦, ಮುದ್ರಣ : ಸೆಪ್ಟೆಂಬರ್ ೨೦೧೦

ಹುಣಸೆ ಮರದ ದೆವ್ವ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲಿ ಅನೇಕರನ್ನು ಬರಹಗಾರರನ್ನಾಗಿ ರೂಪಿಸಿದ ಖ್ಯಾತಿ ಇವರದ್ದು. ಅಕ್ಷರ ಸೌಲಭ್ಯವಂಚಿತ ಕುಟುಂಬದಿಂದ ಬಂದ ಇವರ ಬರಹಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಟಿತ ಗೌರವ ಪ್ರಶಸ್ತಿ ದೊರೆತಿದೆ. ಇಷ್ಟೊಂದು ಪುಸ್ತಕಗಳನ್ನು ಬರೆದರೂ ಬಡತನದಿಂದಲೇ ಬದುಕಿ ಬಾಳಿದವರು. 

೬೦-೭೦ರ ದಶಕದಲ್ಲಿ ತಿಂಗಳಿಗೊಂದರಂತೆ ಕಾದಂಬರಿಯನ್ನು ಅದೂ ಪತ್ತೇದಾರಿ ಸಾಹಿತ್ಯವನ್ನು ಬರೆದು ಜನರಿಗೆ ಓದುವುದರ ಚಟವನ್ನು ಹಿಡಿಸಿದವರು ನರಸಿಂಹಯ್ಯನವರು. ಇವರು ಹಲವಾರು ಕಾಲ್ಪನಿಕ ಪತ್ತೇದಾರರಿಗೆ ಜನ್ಮದಾತರು. ಮಧುಸೂದನ, ಅರಿಂಜಯ, ಗಾಳೀರಾಯ, ಪುರುಷೋತ್ತಮ ಎಂಬೆಲ್ಲಾ ಹೆಸರಿನ ಪತ್ತೇದಾರರ ನೂರಕ್ಕೂ ಮಿಗಿಲಾದ ಸಾಹಸ ಕಥೆಗಳನ್ನು ಓದುಗರಿಗೆ ಉಣಬಡಿಸಿದ ಖ್ಯಾತಿ ಇವರದ್ದು. 

‘ಹುಣಸೆ ಮರದ ದೆವ್ವ' ಒಂದು ಸಣ್ಣ ರೋಚಕ ಕಾದಂಬರಿ. ಇವರ ಬರಹ ಬಹಳ ಸರಳ. ಆಗಿನ ಕಾಲದ ಓದುಗರಿಗೆ ಇದು ಬಹಳವಾಗಿ ರುಚಿಸಿದರೂ ಈಗಿನ ಜನಾಂಗಕ್ಕೆ ಇದು ಇಷ್ಟವಾಗುವುದು ಕಷ್ಟ. ಆದರೂ ಹಿಂದಿನ ಓದಿನ ನೆನಪುಗಳನ್ನು ತಾಜಾ ಮಾಡಲು ಅಂದಿನ ಓದುಗರಿಗೆ ಇದೊಂದು ಸುವರ್ಣಾವಕಾಶ. ೨೦೧೦ರಲ್ಲಿ ಸಪ್ನ ಬುಕ್ ಹೌಸ್ ಅವರು ಎನ್.ನರಸಿಂಹಯ್ಯನವರ ಬಹಳಷ್ಟು ಕಾದಂಬರಿಗಳನ್ನು ಮರುಮುದ್ರಣ ಮಾಡಿರುವರು. ಸಾಹಿತಿ ಕುಂ.ವೀರಭದ್ರಪ್ಪನವರು ಬೆನ್ನುಡಿ ಬರೆದಿದ್ದಾರೆ. ೬೦ ಪುಟಗಳ ಈ ಕಾದಂಬರಿ ಅನ್ನುವುದಕ್ಕಿಂತ ನೀಳ್ಗತೆ ಎಂದರೆ ಸೂಕ್ತವಾದೀತೋ ಏನೋ? ಒಂದೇ ಉಸಿರಲ್ಲಿ ಓದಿ ಮುಗಿಸಬಹುದು ಎಂದರೆ ತಪ್ಪಾಗಲಿಕ್ಕಿಲ್ಲ.