ಕೆಂಪು ಬೆಳೆ

ಕೆಂಪು ಬೆಳೆ

                   ಕೆಂಪು ಬೆಳೆ

ಸ್ವಾರ್ಥದಾ ಭೂಮಿಗೆ ಚಾಡಿಮಾತುಗಳ ಮಳೆ ಬಿದ್ದು
ಕ್ಷೇತ್ರವದು ನಳನಳಿಸಿ ಕಂಗೊಳಿಸುತಿಹುದು

ಅಸಹನೆ ಮತ್ಸರದುಪಕರಣದಿಂ ಉತ್ತಿರಲು
ದ್ವೇಷದಾ ಕಿಡಿಗಳೆಂಬೋ ಬೀಜವನು ಬಿತ್ತಿಹರು

ಸಂಶಯದ ಗೊಬ್ಬರವ ಕಾಲಕಾಲಕೆ ಹಾಕಿ
ಶಾಂತಿ ಸಹನೆಯ ಕಳೆಯ ಚಿವುಟಿ ಹಾಕಿಹರು

ವೈಮನಸ್ಸಿನ ಬೆಳೆಯು ಅಬ್ಬರದಿ ಬೆಳೆದಿರಲು
ಆಹಾ ಎಲ್ಲಿ ನೋಡಿದರಲ್ಲಿ ಕೆಂಪಿನೋಕುಳಿಯು

ಬೆಳೆಯ ಬೆಳೆದವರು ಬೆಳೆಯನುಂಡವರು
ಅಯ್ಯೋ ಕೆಂಗಣ್ಣರಾಗಿ ಮತಿಯ ಮರೆತಿಹರು

ಪತಿ ಪತ್ನಿಯರ ನಡುವೆ ಹೆತ್ತವರ ನಡುವೆ
ವಿರಸದುರಿಯದು ಹೊತ್ತಿ ಜ್ವಲಿಸುತಿಹುದು

ಅತ್ತೆ ಸೊಸೆಯರ ನಡುವೆ ಸೋದರರ ನಡುವೆ
ಮತ್ಸರದ ಬೆಂಕಿ ತಾ ಹೊಗೆಯಾಡುತಿಹುದು

ಬದುಕು ಶಾಶ್ವತವಲ್ಲ ದ್ವೇಶ ಬಿಡಿ ಎಂದವರ
ನಾಲಗೆಯ ಕತ್ತರಿಸಿ ಕರುಳ ಬಗೆದೆಳೆದಿಹರು

************
-ಕವಿ ನಾಗರಾಜ್.

 
Rating
No votes yet

Comments