ನಮ್ಮ ರಾಜ್ಯದ ರಾಜಕಾರಣ
ಕರ್ನಾಟಕದ ಕಿಣ್ಣರು ಗಣಿತ ಮತ್ತು ಜಾಗ್ರಫಿ ವಿಷಯಗಳಲ್ಲಿ ಬೇರೆಲ್ಲಾ ರಾಜ್ಯಗಳ ಕಿಣ್ಣ ರಿಗಿಂತ ಮುಂದೆ ಅಂತೆ – “ಅಧ್ಯಯನ” (ದಿನವೂ ನಾವು ಓದಿದ ದಿನಪತ್ರಿಕೆಯ ಅಧ್ಯಯನ).
ಗಡಗಡ ನಡುಗಿಸುವ ಗಣಿತ, ಜೋಂಪು ಹತ್ತಿಸುವ ಜಾಗ್ರಫಿ ವಿಷಯಗಳಲ್ಲಿ ನಮ್ಮ ಮಕ್ಕಳು ಮುಂದು ಎಂದರೆ ನಮ್ಮ “ಗುರು ದೇವೋಭವಃ” ಸಮುದಾಯ ಹಗಲು ರಾತ್ರಿ ಸಂಶೋಧನೆ ಮಾಡಿ ಹೊಸತನ್ನೇನಾದರೂ ಕಂಡು ಹಿಡಿದಿರಬೇಕು ಗಣಿತ ವನ್ನು amusing ಮಾಡಲು ಮತ್ತು ಜಾಗ್ರಫಿ ಯನ್ನು interesting ಆಗಿಸಲು. ಬಿಡ್ತು ಅನ್ನಿ, ಹಾಗೇನಿಲ್ಲ. ಸರಕಾರ ವಿದ್ಯೆ ಕೊಡುವ ಸಮುದಾಯಕ್ಕೆ ಕೊಡುವ ಸಂಬಳದ ಚೆಂದ ನೋಡಿದರೆ ಅಂಥ ಕಾಲ ಇನ್ನೂ ಬಹು ದೂರ. ಕಲಿಕೆಯಲ್ಲಿ innovation ತರುವ ಮಾತಿರಲಿ, ಬಾರುಕೋಲಿನ ಪ್ರಯೋಗ ಇಲ್ಲದೆ ಪಾಠ ಹೇಳಿದ್ದರೆ ಸಾಕಿತ್ತು ಶಿಕ್ಷಕರು. ಗಣಿತದಲ್ಲೂ, ಭೂಗೋಳದಲ್ಲೂ ನಮ್ಮ ಮಕ್ಕಳು ಮುಂದೆ ಎಂದ ಮಾತಿನಲ್ಲಿ ರಾಜಕಾರಣ ಅಡಗಿದೆ. ಪ್ರತಿಯೊಂದರಲ್ಲೂ ರಾಜಕಾರಣ ಕಾಣುವ ಸಮಾಜ ತಾನೆ ನಮ್ಮದು? ಕರ್ನಾಟಕದ ರಾಜಕೀಯ ದಿನದಿಂದ ದಿನಕ್ಕೆ ಬಗೆಯ ಬಗೆಯ ಮನೋರಂಜನೆಯನ್ನು ಒದಗಿಸುತ್ತಿದ್ದು ಬಿಡುವಿನ ಸಮಯವನ್ನು ವ್ಯರ್ಥ ಮಾಡಲು ಟೀವೀಯ ಮೊರೆಯೋ, ಅಂತರ್ಜಾಲದ ಜಾಲದಲ್ಲೋ ಬೀಳಬೇಕಿಲ್ಲ ಕನ್ನಡಿಗ. ನಮ್ಮ ರಾಜಕಾರಣ ಎನ್ನುವುದು ನಂಬರ್ ಗೇಂ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾಜಪ ನಿಚ್ಚಳ ಬಹುಮತ ಸಾಧಿಸಿದರೂ ಅದನ್ನು ನೆಮ್ಮದಿಯಾಗಿ ಆಳಲು ಬಿಡಲು ಒಲ್ಲೆ ಎನ್ನುವ ಗುಂಪು ಆಗಾಗ ದೊಡ್ಡ ದೊಡ್ಡ ಸದ್ದನ್ನು ಮಾತ್ರವಲ್ಲ, ಎಲ್ಲಾ ಬಗೆಯ ಟ್ರಿಕ್ಕುಗಳನ್ನು ತನ್ನ ಬಗಲಿನಿಂದ ಎಸೆಯುತ್ತಲೇ ಇರುತ್ತದೆ. ಒಂದೆಂಟು ಅತೃಪ್ತ ಶಾಸಕರನ್ನು ನಂದಿ ಬೆಟ್ಟಕ್ಕೋ, ಅದರಲ್ಲೂ ಅತೃಪ್ತರಾದರೆ ಇನ್ನೂ ಹೆಚ್ಚಿನ excitement ಗಾಗಿ ಗೋವಾ ಪರ್ಯಟನೆ ಗೋ ಕಳಿಸಿ ನಮ್ಮ ಸನ್ಮಾನ್ಯ ಮು. ಮಂತ್ರಿಗಳು ಕಣ್ಣೇರು ಹಾಕುವಂತೆ ಮಾಡಿ sadist ಮಜಾ ತೆಗೆದು ಕೊಳ್ಳೋದು. ದಿನ ಬೆಳಗಾದರೆ ಸಾಕು ಅಂಕಿ ಸಂಖ್ಯೆಗಳು ಏರು ಪೇರಾಗುತ್ತವೆ, ಥೇಟ್ ನಮ್ಮ BSE Index ಥರ. ಸ್ಟಾಕ್ ಎಕ್ಸ್ಚೇಂಜ್ ರೀತಿ. ಬೆಳಿಗ್ಗೆ ಸಂಖ್ಯೆಯಲ್ಲಿ ವೃದ್ಧಿ ಕಂಡರೆ ಸಂಜೆಯಾಗುತ್ತಲೇ ಇಳಿತ. ಅಥವಾ “ವೈಸೀ ವರ್ಸಾ”. ಹೀಗೆ ದಿನವೂ ಕೂಡುತ್ತಾ, ಕಳೆಯುತ್ತಾ ಏರುಪೇರಾಗುವ, ಸಂಖ್ಯೆಗಳನ್ನು ನೆನಪಿನಲ್ಲಿ ಇಡಬೇಕು, ಇಲ್ಲದಿದ್ದರೆ ಎರಡು ತಿಂಗಳಿಗೊಮ್ಮೆ ಬರುವ ಟೆಸ್ಟು ಗಳಲ್ಲಿ ನಮ್ಮ ಮು. ಮಂತ್ರಿ ಯಾರು ಎಂದರೆ ತಿಳಿದಿರಲೇಬೇಕಲ್ಲ. ಇಲ್ಲದಿದ್ದರೆ ಸಿಗುವ ಒಂದೇ ಒಂದು ಅಂಕಕ್ಕೂ ಚ್ಯುತಿ. ಹೀಗೆ ಸಂಖ್ಯೆಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಹೆಣಗಾಡುತ್ತಾ ಗಣಿತವನ್ನು ಕರಗತವಾಗಿಸಿ ಕೊಂಡರು ನಮ್ಮ ಮಕ್ಕಳು. ಅದರೊಂದಿಗೆ ಸಂಭವನೀಯತೆ ಎನ್ನುವ ವಿಷ್ಯ ಕೂಡಾ. ಒಂದು ಡೇರೆಯಿಂದ ಮತ್ತೊಂದು ಡೇರೆ ಗೆ ಕೆಲವು ಶಾಸಕರು ಜಿಗಿದರೆ ಯಾರು ಮು. ಮಂತ್ರಿ ಆಗಬಹುದು ಎನ್ನುವ ಸಂಭವನೀಯತೆ. ಸಂಭವನೀಯತೆಯಲ್ಲಿ ನಾಣ್ಯ ಚಿಮ್ಮುವ ಉದಾಹರಣೆ ಕೊಟ್ಟರೆ ರಾಜಕಾರಣದ ಸಂಭವನೀಯತೆಯಲ್ಲಿ ಡೇರೆ ಜಿಗಿಯುವ ಉದಾಹರಣೆ.
ಅತೃಪ್ತ ಸದಸ್ಯರನ್ನು round the world, ಕ್ಷಮಿಸಿ, round the state ಟೂರಿಗೋ, ಅಥವಾ across the sate sojourn ಗೋ ಕಳಿಸಿದಾಗ ಜಾಗ್ರಫಿ ಸಹ ಮೂಡಿ ಬಂತು ತೆರೆಯ ಮೇಲೆ. ಯಾವ ಯಾವ ರೆಸಾರ್ಟ್ ಎಲ್ಲಿದೆ, ಅಡಗುತಾಣಗಳ ವಿಳಾಸ ಇವೆಲ್ಲವನ್ನೂ ತಿಳಿದಾಗ ಜಾಗ್ರಫಿ ಸಹ ಕರಗತವಾಗದೆ ಇದ್ದೀತೆ? ಅಷ್ಟೇ ಅಲ್ಲ, ಟೂರ್ ಹೊಡೆಸಿ, ಆಳಲು ಬೇಕಾದ ಮಾಂತ್ರಿಕ ಸಂಖ್ಯೆಯನ್ನು ಹೊಂದಿಸಿ, ನಂತರ ನಮ್ಮ ದೇಶದ ಅಧ್ಯಕ್ಷೆ ಯವರ ಹತ್ತಿರ ಪರೇಡ್ ಸಹ ಮಾಡಿಸಬೇಕು. ಅದಕ್ಕೆ ದಿಲ್ಲಿಗೆ ಹೋಗಬೇಕು. ಜಾಗ್ರಫಿ ಜ್ಞಾನ ವಿಸ್ತಾರ ಆಯಿತು ನೋಡಿ. ಆ ಪರೇಡ್ ಸಮಯ ಬರೀ ಮು. ಮಂತ್ರಿಗಳೂ, ಶಾಸಕ ಮಹೋದಯರೂ ಇದ್ದರೆ ಸಾಲದು, ಅವರನ್ನು ಕಾಯಲು ಪಕ್ಷದ ವತಿಯಿಂದ ವರಿಷ್ಠ ರೂ ಬರಬೇಕು, ವಿರೋಧೀ ಪಾಳಯ ದೂರದಲ್ಲಿ ನಿಂತು ಗೋವಾದ ಗೋಲ್ದನ್ ಬೀಚ್ ನ ಚಿತ್ರವನ್ನೋ, ನಾನ್ ಸ್ಟಾಪ್ ಅಂಕೆಗಳಿರುವ ಚೆಕ್ ನ ಫೋಟೋ ಕಾಪಿಯನ್ನೋ ತೋರಿಸಿ ಈಚೆ ಕಡೆ ಎಳೆದುಕೊಂಡು ಬಿಟ್ಟರೆ? ಪರೇಡ್ ಒಂದು ರೀತಿಯ ಮುಜುಗರ ತರುವ ಕಪ್ಪೆ ತೂಕವಾಗಿ ಪರಿವರ್ತನೆ ಆಗಬಾರದು ನೋಡಿ.
ನಮ್ಮ ಈ ರಾಜಕೀಯ ಅವ್ಯವಸ್ಥೆಗೆ ಪ್ರಜಾಪ್ರಭುತ್ವ ಎನ್ನುವ ಹೆಸರೇ ಒಂದು ‘misnomer’. ಅಪಪ್ರಯೋಗ. ಈ ವ್ಯವಸ್ಥೆಯಲ್ಲಿ ಪ್ರಜೆ ಪ್ರಭುವಾಗೋದು ಮತದಾನ ಕೇಂದ್ರದ ಕಡೆಗಿನ ನಡಿಗೆ ವೇಳೆ ಮಾತ್ರ. ಅವನನ್ನು ಕಳ್ಳ ನೆಗೆಯಿಂದ, ಓಲೈಸಲು ಡಜನ್ ಗಟ್ಟಲೆ ಜನ. ಮತದಾನವಾಯಿತೋ, ಆ ಕೂಡಲೇ ಅವನು ಹತಾಶ ಏಕಾಂಗಿ, ಮುಂದೆ ಅನಾವರಣಗೊಳ್ಳಲಿರುವ ನಾಟಕದ ಪರದೆ ಮುಂದೆ.
Comments
ಉ: ನಮ್ಮ ರಾಜ್ಯದ ರಾಜಕಾರಣ