ವಿಕೃತ ಮನೋಭಾವ

ವಿಕೃತ ಮನೋಭಾವ

 ಇನ್ನೊಬ್ಬರಿಗೆ ಆಗುವ ಹಿಂಸೆ, ಅವಮಾನಗಳನ್ನು ಕಂಡು ಸಂತೋಷಿಸುವುದು, ಸ್ವತಃ ಹಿಂಸೆ ನೀಡಿ, ಅವಮಾನಿಸಿ ಸಂತೋಷಿಸುವುದೇ ವಿಕೃತಿ. ಈ ವಿಕೃತಿ ಮನುಷ್ಯನ ಅಂತರ್ಗತ ಸ್ವಭಾವವಾಗಿದ್ದು, ಪ್ರಮಾಣ ಹೆಚ್ಚು, ಕಡಿಮೆ ಇರಬಹುದು! ಯಾರನ್ನು ಕಂಡರೆ ಅಸೂಯೆಯೆನಿಸುವುದೋ, ದ್ವೇಷವಿದೆಯೋ ಅಂತಹವರು ತೊಂದರೆಗೊಳಗಾದಾಗ, ಹಾಗೆಯೇ ಆಗಬೇಕು, ಮೆರೀತಿದ್ದ ಬಡ್ಡೀಮಗ ಎಂದು ಸಂತೋಷಪಡದಿರುವವರು ವಿರಳರೇ ಸರಿ. ಕೆಟ್ಟವರು ಅನ್ನಿಸಿಕೊಂಡವರು ಹಿಂಸೆಗೊಳಪಟ್ಟಾಗ, ಅವಮಾನಿತರಾದಾಗ ಒಳ್ಳೆಯವರೆಂದು ಅನ್ನಿಸಿಕೊಂಡವರೂ ಸಂತೋಷಿಸುತ್ತಾರೆ. ವಿಕೃತಿಯ ಕ್ರೂರ ಪರಾಕಾಷ್ಠೆಯೆಂದರೆ ಚಿತ್ರವಿಚಿತ್ರ ಹಿಂಸೆ ನೀಡಿ ಕೊಲ್ಲುವುದು, ಲೈಂಗಿಕವಾಗಿ ಶೋಷಿಸಿ ಹತ್ಯೆಗೈಯುವುದು, ಇತ್ಯಾದಿ. ವಿಕೃತಿಗೆ ಅಸೂಯೆಯೂ ಒಂದು ಕಾರಣವಾಗಿದೆ.

     ಲಂಚಗುಳಿತನ, ಭ್ರಷ್ಠಾಚಾರ, ಇತ್ಯಾದಿಗಳಿಗೆ ದುರಾಸೆಯೇ ಕಾರಣ. ಇದಕ್ಕೆ ಪಕ್ಕಾದವರು ಸಂವೇದನಾಶೀಲತೆಯನ್ನೇ ಕಳೆದುಕೊಳ್ಳುತ್ತಾರೆ. ಬಡವ, ದಿಕ್ಕಿಲ್ಲದವ ಎಂಬುದರ ಪರಿವೆಯೇ ಇಲ್ಲದೆ ಲಂಚಕ್ಕೆ ಕೈಚಾಚುವವರು ಹೃದಯಹೀನರಲ್ಲವೇ? ಖಜಾನೆಗೇ ಕನ್ನ ಕೊರೆಯುವ ಪುಡಾರಿಗಳು, ಅಧಿಕಾರಿಗಳಿಂದಾಗಿ ಸಾರ್ವಜನಿಕರ ಹಣ ಮತ್ತು ಸ್ವತ್ತುಗಳು ಕೆಲವೇ ಕೆಲವರ ಪಾಲಾಗುತ್ತವೆ. ಸಾಮಾನರಿಗೆ ಇದರಿಂದಾಗುವ ಪಡಿಪಾಟಲುಗಳ ಬಗ್ಗೆ ಅವರಿಗೆ ಚಿಂತೆಯಿರುವುದಿಲ್ಲ. ಯಾರು ಹಾಳಾದರೆ ನನಗೇನು, ನಾನು ಸುಖವಾಗಿದ್ದರೆ ಆಯಿತು ಎನ್ನುವುದೂ ವಿಕೃತಿಯ ಒಂದು ಮುಖ. ಸ್ವಾರ್ಥದ ಸಲುವಾಗಿ ದೇಶದ ಹಿತವನ್ನೇ ಕಡೆಗಣಿಸುವ ಜನನಾಯಕರುಗಳೂ ಇದ್ದಾರೆ!

     ಕಾಮಾತುರರ ವಿಕೃತಿ ಮಾನವೀಯತೆಯನ್ನೇ ಅಣಕಿಸುತ್ತದೆ. ಪ್ರಿಯಕರನ ನೆರವಿನಿಂದ ಪತಿಯನ್ನೇ ಕೊಲ್ಲಿಸುವುದು, ಅಡ್ಡಿಯಾಗುತ್ತಾರೆಂದು ಎಳೆ ಮಕ್ಕಳನ್ನೇ ಸಾಯಿಸುವುದು, ಅಸಹಾಯಕತೆ, ದೌರ್ಬಲ್ಯಗಳನ್ನು ದುರುಪಯೋಗಿಸಿಕೊಂಡು ಲೈಂಗಿಕ ದೌರ್ಜನ್ಯವೆಸಗುವುದು, ಚಿಕ್ಕ ಕಂದಮ್ಮಗಳ ಮೇಲಿನ ಅತ್ಯಾಚಾರ ಮುಂತಾದ ಸುದ್ದಿಗಳು ದಿನಬೆಳಗಾದರೆ ರಾಚುತ್ತಿರುತ್ತವೆ. ಆಸ್ತಿಗಾಗಿ ಕುಟುಂಬದವರನ್ನೇ ಕೊಲೆ ಮಾಡುವುದು, ಮತ್ಸರದಿಂದಾಗಿ ಬೆಳೆದು ನಿಂತ ಪೈರಿಗೇ ಬೆಂಕಿ ಹಚ್ಚುವುದು, ಮದದ ಕಾರಣದಿಂದಾಗಿ ಅಸಹಾಯಕರು, ದುರ್ಬಲರನ್ನು ಹಿಂಸಿಸಿ ಆನಂದಿಸುವುದು, ಒಂದೇ, ಎರಡೇ ವಿಕೃತಿಯ ನೂರಾರು ಉದಾಹರಣೆಗಳನ್ನು ಕೊಡಬಹುದು. ಇಂದಿನ ರಾಜಕಾರಣದಲ್ಲಿ ಪುತ್ರವ್ಯಾಮೋಹ, ವಂಶವ್ಯಾಮೋಹ, ಜಾತಿ ವ್ಯಾಮೋಹ, ಅಧಿಕಾರದ ಮೋಹಗಳು ದೇಶವನ್ನು ಅಧೋಗತಿಗೆ ಒಯ್ಯುತ್ತಿವೆ. ವಿಕೃತಿಯನ್ನು ನಿಯಂತ್ರಿಸಬೇಕಾದವರೇ ವಿಕೃತಿಯ ಪೋಷಕರಾಗಿದ್ದಾರೆ. ತಾನು ಹೇಳಿದಂತೆಯೇ ಎಲ್ಲವೂ ಆಗಬೇಕು ಎಂಬ ಅಹಮ್ಮಿನಿಂದಾಗಿ ಕುಟುಂಬದ ಇತರ ಸದಸ್ಯರ ಭಾವನೆಗಳಿಗೂ ಬೆಲೆಕೊಡದೆ ಅವರ ಮನಸ್ಸನ್ನು ಘಾಸಿಪಡಿಸುವುದನ್ನೂ ಕಾಣುತ್ತಿರುತ್ತೇವೆ. ಮನುಷ್ಯನನ್ನು ಕೊಲ್ಲುವುದಕ್ಕಿಂತ ಘೋರ ಅಪರಾಧ ಮನಸ್ಸುಗಳನ್ನು ಕೊಲ್ಲುವುದು!

     ಐಸಿಸ್ ಉಗ್ರರು ನೂರಾರು ಜನರ ಸಮ್ಮುಖದಲ್ಲಿ ಹಲವರ ಶಿರಚ್ಛೇದವನ್ನು ವಿಕೃತಾನಂದ ಮೆರೆಯುತ್ತಾ ಮಾಡುವುದು, ನೆರೆದಿದ್ದವರೂ ಸಹ ಆನಂದದಿಂದ ಅದನ್ನು ವೀಕ್ಷಿಸುವ ಹಲವಾರು ವಿಡಿಯೋಗಳು, ಸೆರೆಹಿಡಿದ ಅಮಾಯಕ ಹೆಣ್ಣುಮಕ್ಕಳನ್ನು ಉಗ್ರರು ಕಾಮತೃಷೆ ತೀರಿಸಿಕೊಳ್ಳಲು ಬಳಸುವ ಮತ್ತು ಅವರನ್ನು ಹರಾಜಿನ ಮೂಲಕ ವಿಕ್ರಯಿಸುವ ವಿಡಿಯೋಗಳು ಅಂತರ್ಜಾಲದಲ್ಲಿ ಹರಿದಾಡುತ್ತಿರುವುದು ಪರಮವಿಕೃತ್ಯಗಳಿಗೆ ಸಾಕ್ಷಿಯಂತಿವೆ.

     ಸ್ವತಃ ವಿಕೃತ್ಯಕ್ಕೆ ಬಲಿಯಾಗಿರುವುದು, ಮನೆಯ ವಾತಾವರಣ, ಹೊಂದಿರುವ ಸ್ನೇಹಿತರು, ಪರಿಸರ, ತಪ್ಪು ಮಾರ್ಗದರ್ಶನದ ಪ್ರಭಾವ, ಮತಾಂಧತೆ, ಸ್ವಾರ್ಥ, ದುರಾಸೆ, ಅಹಂ, ಅರಷಡ್ವರ್ಗಗಳು ವಿಕೃತಿಯ ಪೋಷಕಗಳಾಗಿವೆ. ಆದರೆ ಪ್ರಧಾನವಾದ ಕಾರಣ ಸೇವಿಸುವ ಆಹಾರ ಎಂದರೆ ಆಶ್ಚರ್ಯವಾಗಬಹುದಾದರೂ ಇದು ಸತ್ಯ. ಇಲ್ಲಿ ಆಹಾರವೆಂದರೆ ಕೇವಲ ತಿನ್ನುವ ಕ್ರಿಯೆ ಮಾತ್ರವಲ್ಲ, ನೋಡುವ, ಕೇಳುವ, ಆಸ್ವಾದಿಸುವ, ಸ್ಪರ್ಷಿಸುವ ಸಂಗತಿಗಳಲ್ಲದೆ ಮನೋವ್ಯಾಪಾರಗಳೂ ಆಹಾರದ ವ್ಯಾಪ್ತಿಯಲ್ಲಿ ಬರುತ್ತವೆ. ಒಳ್ಳೆಯ ಆಹಾರ ಸೇವಿಸಿದರೆ ನಾವು ಒಳ್ಳೆಯವರು, ಕೆಟ್ಟ ಆಹಾರ ಸೇವಿಸಿದರೆ ನಾವು ಕೆಟ್ಟವರಾಗುತ್ತೇವೆ ಎಂಬುದು ಸರಳ ನಿಯಮ.

     ಹೊಟ್ಟೆಗೆ ಏನು ತಿಂತೀಯ?- ಯಾರಾದರೂ ಅಚಾತುರ್ಯವೆಸಗಿದಾಗ ಹೀಗೆ ಹೇಳುತ್ತೇವಲ್ಲವೇ? ಸೇವಿಸುವ ಆಹಾರ ಸ್ವಭಾವದ ಮೇಲೆ ಪ್ರಭಾವ ಬೀರುತ್ತದೆ ಎಂಬುದೇ ಇದರ ಅರ್ಥ. ಆಯುರ‍್ವೇದದಲ್ಲಿ ಸಾತ್ವಿಕ, ರಾಜಸಿಕ ಮತ್ತು ತಾಮಸಿಕ ಆಹಾರದ ಬಗ್ಗೆ ವಿವರಣೆ ಸಿಗುತ್ತದೆ. ಸಾತ್ವಿಕ ಗುಣವೆಂದರೆ ರಚನಾತ್ಮಕ, ಸ್ಪಷ್ಟ ಮತ್ತು ಜೀವನವನ್ನು ಪೋಷಿಸುವುದಾಗಿದೆ. ಶಾಂತಿ, ನೆಮ್ಮದಿ, ಪ್ರೀತಿಗಳು ಸಾತ್ವಿಕರ ಲಕ್ಷಣಗಳು. ಸಾತ್ವಿಕರು ಸಾಮಾನ್ಯವಾಗಿ ಆಧ್ಯಾತ್ಮಿಕ ಒಲವುಳ್ಳವರು, ಸರಳರು, ಉದ್ವೇಗರಹಿತರು, ಸಂತುಷ್ಟರು, ಕೋಪನಿಗ್ರಹಿಗಳು, ಇತರರಿಗೆ ಸಂತೋಷ ಕೊಡುವವರು, ಉತ್ಸಾಹಿತರು, ಕುತೂಹಲಿಗಳು ಮತ್ತು ಪ್ರೇರಕರಾಗಿರುತ್ತಾರೆ. ಸಾತ್ವಿಕ ಆಹಾರ ಸತ್ವಯುತವಾಗಿದ್ದು ಸುಲಭವಾಗಿ ಜೀರ್ಣವಾಗುವಂತಹದು ಮತ್ತು ಹಗುರವಾಗಿರುತ್ತವೆ. ಹದವಾಗಿ ಬೇಯಿಸಿದ ತರಕಾರಿಗಳು, ಕಳಿತ ಹಣ್ಣುಗಳು, ಕಾಳುಗಳು, ಜೇನುತುಪ್ಪ, ಶುಂಠಿ, ಸ್ವಲ್ಪ ಪ್ರಮಾಣದ ತುಪ್ಪ, ಹಸುವಿನ ಹಾಲು ಇತ್ಯಾದಿಗಳು ಸಾತ್ವಿಕ ಆಹಾರದ ಪಟ್ಟಿಯಲ್ಲಿವೆ. ಸತ್ವ ಹೆಚ್ಚಿಸಿಕೊಳ್ಳಲು ಯೋಗಾಭ್ಯಾಸ, ಪ್ರಾಣಾಯಾಮ, ಧ್ಯಾನ, ಸತ್ಸಂಗಗಳು, ಪ್ರಶಾಂತವಾದ ಮತ್ತು ಹಿತಕರ ವಾತಾವರಣಗಳು ಸಹಾಯಕಾರಿ. ನೋಡುವ ನೋಟಗಳು, ಕೇಳುವ ಸಂಗತಿಗಳು, ಓದುವ ಪುಸ್ತಕಗಳು ಒಳ್ಳೆಯದಾಗಿದ್ದಲ್ಲಿ ಅವೂ ಸಾತ್ವಿಕ ಗುಣವನ್ನು ವೃದ್ಧಿಸುತ್ತವೆ.

     ರಾಜಸಿಕತೆಯೆಂದರೆ ಮನ್ನುಗ್ಗುವ ಮತ್ತು ಚಟುವಟಿಕೆಯಿಂದ ಒಡಗೂಡಿದ ಸ್ವಭಾವ. ಅತಿಯಾದಲ್ಲಿ ಇದು ಅತಿ ಚಟುವಟಿಕೆ ಮತ್ತು ತಳಮಳಕ್ಕೂ ಕಾರಣವಾಗುತ್ತದೆ. ಅವಿಶ್ರಾಂತ ಮನಸ್ಸು ಭಯ, ಕಾತುರ ಮತ್ತು ಉಗ್ರತೆಯಿಂದ ಚಡಪಡಿಸುತ್ತದೆ. ಮಿತಿಯಲ್ಲಿರುವ ರಾಜಸಿಕತೆ ಒಳ್ಳೆಯ ಫಲ ನೀಡುತ್ತದೆ, ಸಮಾಜಕ್ಕೆ ಉಪಕಾರಿಯಾಗಿರುತ್ತದೆ. ಅತಿಯಾದಲ್ಲಿ ಗರ್ವ, ಸ್ಪರ್ಧೆ, ಅತಿಕ್ರಮಣಕಾರಿ ಮನೋಭಾವ ಮತ್ತು ಮತ್ಸರಕ್ಕೆ ರಹದಾರಿಯಾಗುತ್ತದೆ. ಅತಿ ರಾಜಸಿಕತೆಯಲ್ಲಿ ಯಾವುದು ಒಳ್ಳೆಯದೆಂದು ಹೃದಯಕ್ಕೆ ಗೊತ್ತಿದ್ದರೂ, ಮನಸ್ಸು ಮಾತ್ರ ಬೇರೆಲ್ಲೋ ಕೊಂಡೊಯ್ದುಬಿಡುತ್ತದೆ. ನೋಡುವ ದೃಷ್ಯಗಳು/ಸಂಗತಿಗಳು, ದಾರಿ ತಪ್ಪಿಸುವ ಚಿತ್ರಗಳು, ಧಾರಾವಾಹಿಗಳು, ಕೇಳುವ ಕೆಟ್ಟ ಮಾತುಗಳು, ವಾಸಿಸುವ ಅಶಾಂತ ಪರಿಸರ ರಾಜಸಿಕತೆ ಪ್ರಚೋದಿಸುತ್ತವೆ. ವ್ಯಾಯಾಮ, ಪ್ರಯಾಣ, ಮಾತುಗಳು, ಕೆಲಸಗಳು, ಮನರಂಜನೆಗಳು ಇವು ಅಗತ್ಯಕ್ಕಿಂತ ಹೆಚ್ಚಾದರೆ ಮನಸ್ಸಿನ ಮೇಲೆ ಪ್ರಭಾವ ಬೀರುತ್ತವೆ. ಕರಿದ, ಹರಿದ ಪದಾರ್ಥಗಳು, ಚಾಕೊಲೇಟುಗಳು, ಅತಿಯಾದ ಸಿಹಿ, ಉಪ್ಪು, ಖಾರದ ಪದಾರ್ಥಗಳು, ಮಸಾಲೆ ಪದಾರ್ಥಗಳು ಇತ್ಯಾದಿಗಳು ರಾಜಸಿಕ ಆಹಾರದ ಪಟ್ಟಿಯಲ್ಲಿವೆ.

     ತಾಮಸಿಕತೆ ನಾಶ ಮಾಡುವ ಗುಣವಾಗಿದೆ. ಆಲಸ್ಯ, ಜಡತ್ವ, ನಿರಾಶೆ, ಖಿನ್ನತೆ, ಕ್ರೋಧ ಇದರ ಉತ್ಪನ್ನಗಳು. ತಮೋಗುಣ ಹೆಚ್ಚಾದರೆ ಅನರ್ಥಕಾರಿ. ಕೀಳು ಅಭಿರುಚಿಯ ಚಿತ್ರಗಳು, ಅಂತರ್ಜಾಲದ ಅಶ್ಲೀಲ ತಾಣಗಳು ತಾಮಸಿಕತೆಯ ಬೆಂಕಿಗೆ ತುಪ್ಪ ಸುರಿಯುತ್ತವೆ. ತಾಮಸಿಕರು ಸ್ವನಾಶಕ್ಕೆಡೆಮಾಡುವ ಜೀವನಶೈಲಿ ಮತ್ತು ಆಹಾರಸೇವನೆಯ ಅಭ್ಯಾಸದವರಾಗಿರುತ್ತಾರೆ. ಆಹಾರ ಸೇವನೆ, ಕಾಮ ಚಟುವಟಿಕೆ, ಮಾದಕ ದ್ರವ್ಯಗಳ ಸೇವನೆ ಎಲ್ಲದರಲ್ಲೂ ಅತಿಯಾಗಿರಲು ಹಂಬಲಿಸುತ್ತಾರೆ.  ಪರಿಣಾಮವಾಗಿ ನಿಸ್ತೇಜತೆ, ಭಾರವಾದ ಮನಸ್ಸಿನೊಂದಿಗೆ ಏನು ಮಾಡಬೇಕೆಂದು ತೋಚದ ಸ್ಥಿತಿಗೆ ತಲುಪುತ್ತಾರೆ. ತಮ್ಮ ಮತ್ತು ಇತರರ ಬಗ್ಗೆ ಲೆಕ್ಕಿಸದಂತೆ ಇರುತ್ತಾರೆ. ಕೊನೆಯಲ್ಲಿ ಯಾವ ಸ್ಥಿತಿಗೆ ತಲುಪುತ್ತಾರೆಂದರೆ ತಮಗೆ ತಾವು ಸಹಾಯ ಮಾಡಿಕೊಳ್ಳಲಾಗದಂತಾಗಿ ಇತರರನ್ನು ಆಶ್ರಯಿಸಬೇಕಾಗುತ್ತದೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದನ್ನು ನಿರ್ಧರಿಸಲಾರರು. ತಾಮಸಿಕ ಆಹಾರ ಕಡಿಮೆ ಸತ್ವಯುತವಾಗಿದ್ದು, ಹಳೆಯದಾದ ಮತ್ತು ತಂಗಳು ಆಹಾರ, ಅತಿಯಾಗಿ ಕರಿದ ಮತ್ತು ಹುರಿದ ಪದಾರ್ಥಗಳು, ಸುಲಭವಾಗಿ ಜೀರ್ಣವಾಗದ ಗಡಸು ಆಹಾರ, ಹೆಚ್ಚು ಅನ್ನಿಸುವಷ್ಟು ಮಾಂಸಾಹಾರ, ಇತ್ಯಾದಿಗಳು ತಾಮಸಿಕವೆನಿಸುವ ಆಹಾರಗಳ ಪಟ್ಟಿಯಲ್ಲಿವೆ. ಮಾದಕ ದ್ರವ್ಯಗಳು, ಡ್ರಗ್ಸ್ ಮುಂತಾದವು ತಾಮಸ ಗುಣ ಪ್ರಚೋದಕಗಳು. ಮೆದುಳಿನ ಮೇಲೆ ಪ್ರಭಾವ ಬೀರುವ, ಅದನ್ನು ಮಂಕುಗೊಳಿಸುವ ಪದಾರ್ಥಗಳೆಲ್ಲವೂ ತಾಮಸಿಕ ಆಹಾರವೆನಿಸುವುವು.

     ಪ್ರತಿಯೊಬ್ಬರೂ ಸಾತ್ವಿಕ, ರಾಜಸಿಕ ಮತ್ತು ತಾಮಸ ಗುಣಗಳ ಮಿಶ್ರಣವಾಗಿರುತ್ತಾರೆ. ಕೆಲವರಲ್ಲಿ ಕೆಲವೊಂದು ಗುಣಗಳು ಪ್ರಧಾನವಾಗಿದ್ದು, ಅವು ಅವರ ವ್ಯಕ್ತಿತ್ವವನ್ನು ತೋರಿಸುತ್ತವೆ. ನಾವು ಏನಾಗಬೇಕು, ಹೇಗಿರಬೇಕು ಎಂಬುದನ್ನು ಸೂಕ್ತವಾಗಿ ಆರಿಸಿಕೊಳ್ಳುವ ಅನ್ನದ ಮೂಲಕ ಮತ್ತು ಬದಲಾಯಿಸಿಕೊಳ್ಳುವ ಜೀವನಶೈಲಿಯಿಂದ ಪಡೆದುಕೊಳ್ಳಬಲ್ಲೆವು. ವಿಕೃತಿಯಿಂದ ಸುಕೃತಿಯೆಡೆಗೆ ಸಾಗಲು ಉತ್ತಮ ಆಹಾರ (ಕೇವಲ ತಿನ್ನುವುದಲ್ಲ, ನೋಡುವುದು, ಕೇಳುವುದು, ಪಂಚೇಂದ್ರಿಯಗಳಿಂದ ಸ್ವೀಕರಿಸುವುದೂ ಸೇರಿದಂತೆ) ಸೇವಿಸುವುದೇ ಉಪಾಯವಾಗಿದೆ, ಪರ್ಯಾಯ ಮಾರ್ಗವಿಲ್ಲ.

-ಕ.ವೆಂ.ನಾಗರಾಜ್.